ಬೆಂಗಳೂರು: ಕರ್ನಾಟಕ ವಿಧಾನಸಭೆ ಗುರುವಾರ ನೀಟ್ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ ಇದನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಂಡಿಸಿದರು ಎಂದು ಸಂಸ್ಥೆ ತಿಳಿಸಿದೆ.
ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ನೀಟ್ ಅನ್ನು ರದ್ದುಗೊಳಿಸುವ ಮತ್ತು ಅದರ ಸ್ಥಾನದಲ್ಲಿ ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿತು.
ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.
ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.


