ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತ ಆಗಿರುವುದು ಮತ್ತೊಮ್ಮೆ ದೃಢಪಟ್ಟಿದೆ. ನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.
ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಾಯುಸೇನೆ ನೆಲೆಯ ಏಳನೇ ವಸತಿಗೃಹಗಳ ಕ್ಯಾಂಪ್ನಲ್ಲಿ ಬೆಳಿಗ್ಗೆ 6.30ರ ವೇಳೆಗೆ 76 ವರ್ಷದ ನಿವೃತ್ತ ಶಿಕ್ಷಕಿ ರಾಜ್ ದುಲಾರಿ ಸಿನ್ಹಾ ವಾಯುವಿಹಾರ ನಡೆಸುತ್ತಿದ್ದರು. ಆಗ ಅವರ ಮೇಲೆ ಒಂದಲ್ಲ, ಎರಡಲ್ಲ ಬರೋಬ್ಬರಿ 12 ಬೀದಿನಾಯಿಗಳು ದಾಳಿ ನಡೆಸಿವೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಇವರು ವಾಯುಸೇನೆ ಯೋಧರರೊಬ್ಬರ ಅತ್ತೆ ಎಂದು ತಿಳಿದು ಬಂದಿದೆ.
ಈ ಪ್ರಕರಣದ ನಂತರ ಸಾರ್ವಜನಿಕರು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರಮ ಕೈಗೊಳ್ಳುತ್ತಿಲ್ಲ. ಈ ಭಾಗದಲ್ಲಿ ಬೀದಿ ನಾಯಿ ಹೆಚ್ಚಾಗಿವೆ. ಪಾಲಿಕೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಕೇವಲ ಈ ಭಾಗದಲ್ಲಿ ಮಾತ್ರವಲ್ಲ, ನಮ್ಮ ಭಾಗದಲ್ಲೂ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ ಎಂದು ನಗರದ ಬಹುತೇಕ ಭಾಗಗಳ ನಿವಾಸಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ಜೈಲಿನಲ್ಲಿ ಸಿಗರೇಟ್ ಕೊಟ್ಟಿದ್ದು ಯಾರು? ವಿಚಾರಣೆ ವೇಳೆ ಸತ್ಯ ಬಾಯಿಬಿಟ್ಟ ನಟ ದರ್ಶನ್!


