ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 2022ರಲ್ಲಿ ನಡೆದಿದ್ದ ವಿದ್ಯುತ್ ಪ್ರವರ್ತಕ (ಟ್ರಾನ್ಸ್ಫಾರ್ಮರ್) ಸ್ಫೋಟಗೊಂಡು ತಂದೆ-ಮಗು ಸಾವಿಗೆ ಕಾರಣವಾದ ಆರೋಪದಲ್ಲಿ ಬೆಸ್ಕಾಂನ ಕಿರಿಯ ಎಂಜಿನಿಯರ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯ ಕಾಗ್ನಿಜನ್ಸ್ ತೆಗೆದುಕೊಂಡ ಕ್ರಮ ಪ್ರಶ್ನಿಸಿ ಕಿರಿಯ ಎಂಜಿನಿಯರ್ ಮಹಾಂತೇಶ್ ಎಸ್ ನಾಗೂರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ಘಟನೆ ಅತ್ಯಂತ ಅಪಾಯಕಾರಿಯಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ ಎಂಬ ಕಾರಣಕ್ಕೆ ಪ್ರಕರಣವನ್ನು ರದ್ದುಪಡಿಸಲಾಗದು. ಅರ್ಜಿದಾರರು ವಿಚಾರಣೆ ಎದುರಿಸಿ ಆರೋಪದಿಂದ ಮುಕ್ತರಾಗಿ ಹೊರಬರಬೇಕಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಪ್ರವರ್ತಕಗಳ ದೋಷಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ದಾಖಲಾಗಿವೆ. ಈ ಸಂಬಂಧ ತನಿಖಾಧಿಕಾರಿಗಳು ಆರೋಪ ಪಟ್ಟಿಯಲ್ಲಿ ವಿವರಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಮತ್ತು ಇತರ ಆರೋಪಿಗಳು ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧದ ವಿಚಾರಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿದ್ಯುತ್ ಪ್ರವರ್ತಕಗಳನ್ನು ನಿರ್ವಹಣೆ ಮಾಡುವ ಕಾರ್ಯ ಗುತ್ತಿಗೆದಾರರದ್ದಾಗಿರಲಿದೆ. ಘಟನೆಗೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ಅರ್ಜಿದಾರರು ಬೆಸ್ಕಾಂನ ಕಿರಿಯ ಎಂಜಿನಿಯರ್ ಆಗಿದ್ದು, ಅವರಿಗೆ ನಿಗದಿಪಡಿಸಿರುವ ವ್ಯಾಪ್ತಿಯಲ್ಲಿನ ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆಗೆ ಜವಾಬ್ದಾರರಾಗಿದ್ದಾರೆ. ಜೊತೆಗೆ, ಅವರ ವ್ಯಾಪ್ತಿಯಲ್ಲಿನ ಟ್ರಾನ್ಸ್ಫಾರ್ಮರ್ಗಳ ಕುರಿತಂತೆ ಸಲ್ಲಿಕೆಯಾಗಿದ್ದ ದೂರುಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಅರ್ಜಿದಾರರು ವಿಚಾರಣೆ ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದು ಪೀಠಕ್ಕೆ ತಿಳಿಸಿದರು. ವಾದ – ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.


