BBMP
Loading ...

ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು.

ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ ಬಂದೋಬಸ್ತ್‌ ಕೈಗೊಳ್ಳಬೇಕು. ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರೂ ಕೇಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕ್ರಿಸ್‌ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು‌.

ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ‌ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ, ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.‌ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು‌. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್​ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ. ಮಹಿಳಾ‌ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ರಾಜ್ಯ ಸರ್ಕಾರ ಆದೇಶ!

Leave a Reply

Your email address will not be published. Required fields are marked *