ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಇಸ್ರೋ ಬಡಾವಣೆ ಉಪ ವಿಭಾಗದ (ವಸಂತಪುರ ಸೆಕ್ಷನ್) ಸಹಾಯಕ ಎಂಜಿನಿಯರ್ ವಿನಯ್ ಕುಮಾರ್ ಅವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಎಲೆಕ್ಟ್ರಿಕಲ್ ಗುತ್ತಿಗೆದಾರ ಆಗಿರುವ ಮಾರುತಿ ರಾಮಣ್ಣ ಅವರಿಗೆ ಟ್ರಾನ್ಸ್ಫಾರ್ಮರ್ ನೀಡಲು ವಿನಯ್ ಅವರು 2 ಲಕ್ಷ ರೂ. ಲಂಚ ಕೇಳಿದ್ದರು. ಈ ಬಗ್ಗೆ ಮಾರುತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರು ಆಧರಿಸಿ, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿ ಅಡಿವೇಶ್ ಗುಡಿಗೊಪ್ಪ ಅವರು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ. ಲೋಕಾಯುಕ್ತ ಬೆಂಗಳೂರು ನಗರ ಎಸ್ಪಿ ಶ್ರೀನಾಥ ಮಹಾದೇವ ಜೋಷಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.


