ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದಲ್ಲಿ ಓರ್ವ ಆರೋಪಿಯನನ್ನು ಬಂಧಿಸಿ, ಸ್ಥಳ ಮಹಜರು ನಡೆಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವಿನಾಯಕನಗರದ ನಿವಾಸಿ ಕರ್ಣ ಅವರು ಅನೇಕ ವರ್ಷಗಳಿಂದ ಹಸು ಸಾಕುತ್ತಿದ್ದಾರೆ. ಶನಿವಾರ (ಜ.11) ತಡರಾತ್ರಿ ಕೆಲ ದುಷ್ಕರ್ಮಿಗಳು 3 ಹಸುಗಳ ಕೆಚ್ಚಲನ್ನು ಕತ್ತರಿಸಿ, ಮಚ್ಚಿನಿಂದ ಹಲ್ಲೆ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಹಸುವಿನ ಮಾಲೀಕ ದೂರು ದಾಖಲಿಸಿದ್ದರು. ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹಸುಗಳಿಗೆ ಚಾಮರಾಜಪೇಟೆಯಲ್ಲಿರುವ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿ 20ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಂಸದ ಪಿಸಿ ಮೋಹನ್ ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ಕೊಡುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಂಸದ ಪಿಸಿ ಮೋಹನ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಅದಕ್ಕೆ ಈ ಘಟನೆಯೇ ಜೀವಂತ ಸಾಕ್ಷಿಯಾಗಿದೆ. ಮೂಕಪ್ರಾಣಿಗಳ ಕಾಲಿಗೆ ಮಚ್ಚಿನಿಂದ ಹೊಡೆದಿರುವ ದುರುಳರು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ದಾರೆ ಎಂದರು. ಅಲ್ಲದೆ, ಮೊದಲು ಇಲ್ಲಿ ಹಸುವಿನ ಆಸ್ಪತ್ರೆಯಿತ್ತು. ಅದನ್ನು ಮುಚ್ಚಲು ಮುಂದಾಗಿದ್ದರು. ಆದರೆ, ಇದನ್ನು ಹಸುವಿನ ಮಾಲೀಕ ಕರ್ಣ ವಿರೋಧಿಸಿದ್ದ. ಅದಕ್ಕೆ ಈ ರೀತಿ ಮಾಡಿದ್ಧಾರೆ ಎಂದು ಸಂಸದ ಪಿಸಿ ಮೋಹನ್ ಆರೋಪಿಸಿದ್ದಾರೆ.
ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಿಂದು ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಹಾಗೂ ಬಿಜೆಪಿ ಮುಖಂಡರುಗಳು ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.
ಅನಗತ್ಯ ಗೊಂದಲ ಬೇಡ, ಒಕ್ಕಲಿಗರ ಸಭೆ ಮುಂದೂಡಿ: ಸಂಘದ ಪದಾಧಿಕಾರಿಗಳಿಗೆ ಡಿಸಿಎಂ ಸೂಚನೆ


