ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದು, ಐಸ್ ಕ್ರೀಂ ತಿನ್ನಲು ಹೋಗಿ ಕರ್ನಾಟಕದ 17 ಜನರು ಉಗ್ರರ ದಾಳಿಯಿಂದ ಬಚಾವ್ ಆಗಿದ್ದಾರೆ.
ಈ ಬಗ್ಗೆ ಜಮ್ಮು-ಕಾಶ್ಮೀರಕ್ಕೆ ಹೋಗಿದ್ದ ಕನ್ನಡತಿ ಸುಮನಾ ಭಟ್ ಹೇಳಿಕೆ ನೀಡಿದ್ದಾರೆ. ಸುಮನಾ ಭಟ್ ಸೇರಿ 17 ಮಂದಿ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದರು. ನಾವು ದಾರಿ ಮಧ್ಯೆ ಐಸ್ ಕ್ರೀಂ ತಿನ್ನಲು ಗಾಡಿ ನಿಲ್ಲಿಸಿದ್ದೆವು. ಇದರಿಂದ ಪಹಲ್ಗಾಮ್ ತೆರಳಲು ತಡವಾಗಿತ್ತು. ಒಂದು ವೇಳೆ ಮುಂಚೆ ಹೋಗಿದ್ದರೆ ನಾವು ಕೂಡ ಬಲಿಯಾಗುತ್ತಿದ್ದೆವು. ಅದೃಷ್ಟವಶಾತ್ ನಾವೆಲ್ಲರೂ ಪಾರಾಗಿದ್ದೇವೆ. ನಮಗೆ ನಾಡಿದ್ದು ಫ್ಲೈಟ್ ಇದೆ, ನಾವು ಕರ್ನಾಟಕಕ್ಕೆ ವಾಪಸ್ ಆಗುತ್ತೇವೆ’’ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರಿಗ ಬಲಿಯಾಗಿದ್ದು, ಸಾವಿನ ಸಂಖ್ಯೆ 28 ಕ್ಕೇರಿಕೆಯಾಗಿದೆ.
ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ
ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ.
1. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.
2. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ಕೋರಿದೆ.
* 080-43344334
* 080-43344335
* 080-43344336
* 080-43344342
ಪಹಲ್ಗಾಮ್ ದಾಳಿ ಹಿನ್ನೆಲೆ
ನಿನ್ನೆ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 28 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ‘ದಿ ರೆಸಿಸ್ಟನ್ಸ್ ಫ್ರಂಟ್’ ವಹಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಲೇಜು ಆವರಣದಲ್ಲಿ ಮಾತನಾಡುವಾಗ ಫೋನ್ ಕಿತ್ಕೊಂಡ ಲೆಕ್ಚರರ್ಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ! ವಿಡಿಯೋ ವೈರಲ್


