ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ಗುಜರಾತಿನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಅಹಮದಾಬಾದ್ನಿಂದ ಲಂಡನ್ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಹಮದಾಬಾದ್ ನಗರದ ಪೊಲೀಸ್ ಮುಖ್ಯಸ್ಥರು ತಿಳಿಸಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ (ಎಪಿ) ವರದಿ ಮಾಡಿದೆ.
ಬೋಯಿಂಗ್ 787-8 ಡ್ರೀಮ್ಲೈನರ್ ಹೆಸರಿನ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಈ ದುರ್ಘಟನೆ ಸಂಭವಿಸಿದೆ. ಪತನದ ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು. ಏಳು ಅಗ್ನಿಶಾಮಕ ವಾಹನಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಮೃತ 242 ಮಂದಿಯಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟೀಷ್ ಪ್ರಜೆಗಳು, 7 ಮಂದಿ ಪೋರ್ಚುಗಲ್ ಮತ್ತು ಕೆನಾಡದ ಒಬ್ಬರೆಂದು ತಿಳಿದುಬಂದಿದೆ.
ಆನ್ಲೈನ್ ಫ್ಲೈಟ್ ಟ್ರ್ಯಾಕರ್ನಲ್ಲಿ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣದ ಕಡೆಗೆ ಮಧ್ಯಾಹ್ನ 1.38ಕ್ಕೆ ಟೇಕಾಫ್ ಆಯಿತು. ಇದಾದ 5 ನಿಮಿಷದಲ್ಲಿ ವಿಮಾನ ಪತನಗೊಂಡಿದೆ. ಮೇಘನಿಗಢದ ಘೇಡಾಸರ್ ಕ್ಯಾಂಪ್ ಪ್ರದೇಶದ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿತು. ಇದರಿಂದಾಗಿ ಎರಡು ಬಹುಮಹಡಿ ಕಟ್ಟಡಗಳು ಹಾನಿಗೊಳಗಾಗಿದ್ದು, ಆ ಕಟ್ಟಡಗಳಲ್ಲಿದ್ದ ಅನೇಕ ಜನರು ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಅಲ್ಲದೆ, ಕೆಲ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ನೇತೃತ್ವದಲ್ಲಿ ಪ್ರಥಮ ಅಧಿಕಾರಿ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿ ಪ್ರಯಾಣ ಬೆಳೆಸಿತ್ತು. ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರಿಗೆ 8200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. ಸಹ ಪೈಲಟ್ಗೆ 1100 ಗಂಟೆಗಳ ಹಾರಾಟದ ಅನುಭವವಿತ್ತು. ವಿಮಾನ ಪತನದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಹಮದಾಬಾದ್-ಲಂಡನ್ ಗ್ಯಾಟ್ವಿಕ್ ವಿಮಾನ AI171 ಇಂದು (ಜೂನ್ 12) ಒಂದು ದುರಂತದಲ್ಲಿ ಸಿಲುಕಿದೆ. ಈ ಕ್ಷಣದಲ್ಲಿ, ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಹೆಚ್ಚಿನ ಅಪ್ಡೇಟ್ಗಳನ್ನು ಆದಷ್ಟು ಬೇಗ ಹಂಚಿಕೊಳ್ಳುತ್ತೇವೆ ಎಂದು ಏರ್ ಇಂಡಿಯಾ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಎಲ್ಲಾ ವಾಯುಯಾನ ಮತ್ತು ತುರ್ತು ಪ್ರತಿಕ್ರಿಯೆ ಸಂಸ್ಥೆಗಳಿಗೆ ತ್ವರಿತ ಮತ್ತು ಸಂಘಟಿತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಮತ್ತು ವೈದ್ಯಕೀಯ ನೆರವು ಮತ್ತು ಪರಿಹಾರ ನೆರವನ್ನು ಸ್ಥಳಕ್ಕೆ ತಲುಪಿಸಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಘಟನೆಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ತಾವು ಅಹಮದಾಬಾದ್ಗೆ ಧಾವಿಸುತ್ತಿರುವುದಾಗಿ ಸಚಿವರು ಪ್ರಧಾನಿಗೆ ತಿಳಿಸಿದರು. ಅಗತ್ಯವಿರುವ ಎಲ್ಲಾ ಬೆಂಬಲವನ್ನು ತಕ್ಷಣವೇ ನೀಡಲಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿಯವರು ಸಚಿವರಿಗೆ ನಿರ್ದೇಶನ ನೀಡಿದ್ದಾರೆ ಮತ್ತು ಪರಿಸ್ಥಿತಿಯ ಬಗ್ಗೆ ನಿಯಮಿತವಾಗಿ ಮಾಹಿತಿ ನೀಡಬೇಕೆಂದು ಕೇಳಿಕೊಂಡಿದ್ದಾರೆ.
242 ಜನರನ್ನು ಹೊತ್ತೊಯ್ಯುತ್ತಿದ್ದ Air India ವಿಮಾನ ಅಹಮದಾಬಾದ್ ಏರ್ಪೋಟ್ ಬಳಿ ಪತನ: ನೂರಕ್ಕೂ ಅಧಿಕ ಸಾವು


