ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಬೆನ್ನಲ್ಲೇ ಎ2 ಆರೋಪಿ ನಟ ದರ್ಶನ್ರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಎ1 ಆರೋಪಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳನ್ನು ಮತ್ತೆ ಜೈಲಿಗೆ ಕಳುಹಿಸಲಾಗುತ್ತದೆ.
ನಿನ್ನೆ ರಾತ್ರಿ ಮಡಿಕೇರಿಯಲ್ಲಿ ಉಳಿದುಕೊಂಡಿದ್ದ ದರ್ಶನ್, ಇಂದು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈರೋಡ್ ಜಿಲ್ಲೆಯ ಅಂದಿಯೂರಿನಲ್ಲಿ ನಡೆಯುತ್ತಿರುವ ಗುರುನಾಥಸ್ವಾಮಿ ಕುದುರೆ ಹಾಗು ಹಸುಗಳ ಜಾತ್ರೆಗೆ ದರ್ಶನ್ ತೆರಳಿದ್ದರು. ಇಂದು ಬೆಳ್ಳಂಬೆಳಗ್ಗೆ ಚಾಮರಾಜನಗರ ಜಿಲ್ಲೆ ಗಡಿಭಾಗದ ಮೂಲಕ ಅಂದಿಯೂರಿಗೆ ತೆರಳಿದ್ದರು. ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ದರ್ಶನ್ರನ್ನು ಬಂಧಿಸಲಾಗಿದೆ.
ಹೊಸಕೆರೆಹಳ್ಳಿಯಲ್ಲಿರುವ ತಮ್ಮ ಪತ್ನಿ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಪತ್ನಿ ವಿಜಯಲಕ್ಷ್ಮೀ ಉಳಿದುಕೊಂಡಿರುವ ಅಪಾರ್ಟ್ಮೆಂಟ್ಗೆ ಮಾಧ್ಯಮಗಳ ಕಣ್ತಪ್ಪಿಸಿ ಹಿಂಬದಿ ಗೇಟ್ನಿಂದ ಆಗಮಿಸಿದರು. ಬಳಿಕ 15ನೇ ಮಹಡಿಯ 415ನೇ ಫ್ಲ್ಯಾಟ್ಗೆ ತೆರಳಿದರು. ದರ್ಶನ್ ಅವರ ಜೀಪ್ ಮುಂದಿನ ಗೇಟ್ನಲ್ಲಿ ಆಗಮಿಸಿತು. ಆದರೆ, ದರ್ಶನ್ ಇದ್ದ ಇನ್ನೋವಾ ಕಾರು ಹಿಂಬದಿ ಗೇಟ್ನಿಂದ ಆಗಮಿಸಿತು. ಮನೆಯಲ್ಲಿರುವಾಗಲೇ ದರ್ಶನ್ರನ್ನು ಬಂಧಿಸಲಾಗಿದೆ.
ಗೋವಿಂದರಾಜನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಹಾಗೂ ಕಾಮಾಕ್ಷಿ ಪಾಳ್ಯ ಠಾಣೆಯ ಇನ್ಸ್ಪೆಕ್ಟರ್ ನಾಗೇಶ್ ನೇತೃತ್ವದಲ್ಲಿ ದರ್ಶನ್ ಬಂಧನವಾಗಿದೆ. ಜಾಮೀನು ಸಿಗುವ ಮುನ್ನ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಹೀಗಾಗಿ ದರ್ಶನ್ರನ್ನು ಮತ್ತೆ ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದೆ.
ಅಂದಹಾಗೆ, ಕಳೆದ 7 ತಿಂಗಳಿಂದ ಜಾಮೀನಿನ ಮೇಲೆ ಹೊರಗಡೆ ಇದ್ದ ದರ್ಶನ್ ಮತ್ತೆ ಜೈಲು ಸೇರಬೇಕಾದ ಸನ್ನಿವೇಶ ಎದುರಾಗಿದೆ. ಆರೋಗ್ಯ ನೆಪ ಹೇಳಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದ ದರ್ಶನ್ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ದರ್ಶನ್ ಸೇರಿದಂತೆ ಎಲ್ಲ 7 ಆರೋಪಿಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ ರದ್ದು ಮಾಡಿತು. ಹೈಕೋರ್ಟ್ ನೀಡಿದ ಜಾಮೀನಿನಲ್ಲಿ ದೋಷವಿದೆ. ಜೈಲಿನಲ್ಲಿ ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಈ ಪ್ರಕರಣ ಬೆಳಗಕಿಗೆ ಬಂದ ಕೂಡಲೇ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದೊಂದು ಲ್ಯಾಂಡ್ ಮಾರ್ಕ್ ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿತು. ಅಲ್ಲದೆ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿ ಜೈಲಿನ ಲಾನ್ನಲ್ಲಿ ಸಿಗರೇಟ್ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ.


