ಬೆಂಗಳೂರು: ಬಡವರು ಹಾಗೂ ಮಧ್ಯಮ ವರ್ಗದವರು ಅನಧಿಕೃತವಾಗಿ ಕಟ್ಟಿಕೊಂಡಿರುವ ಕಡಿಮೆ ವಿಸ್ತೀರ್ಣದ ಕಟ್ಟಡಗಳಿಗೆ ಕಾನೂನು ಚೌಕಟ್ಟಿನಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಗೆ ತಿಳಿಸಿದ್ದಾರೆ. 2030, 3040 ಅದಕ್ಕಿಂತ ಕಡಿಮೆ ವಿಸ್ತೀರ್ಣದ ಸೈಟುಗಳಿಗೆ ವಿನಾಯ್ತಿ ನೀಡುವ ಸಾಧ್ಯತೆ ಇದೆ. ಈ ಮೂಲಕ ಸ್ವಾಧೀನಾನುಭವ ಪತ್ರ ಇಲ್ಲದೇ ಪರದಾಡುತ್ತಿರುವ ಬೆಂಗಳೂರಿನ ಲಕ್ಷಾಂತರ ಮನೆಗಳ ಮಾಲೀಕರಿಗೆ ಒಂದಿಷ್ಟು ರಿಲೀಫ್ ಸಿಕ್ಕಿದೆ.
ಏನಿದು ಸ್ವಾಧೀನಾನುಭವ ಪತ್ರ ?
ಬಿಬಿಎಂಪಿ, ನಗರ ಸಭೆ, ಮಹಾನಗರ ಪಾಲಿಕೆಯಂತಹ ಸ್ಥಳೀಯ ಸಂಸ್ಥೆಗಳಿಂದ ಕಟ್ಟಡಕ್ಕೆ ನೀಡಲಾಗುವ ಕಾನೂನುಬದ್ಧ ದಾಖಲೆಯೇ ಕಟ್ಟಡ ಸ್ವಾಧೀನಾನುಭವ ಪತ್ರ (ಒಸಿ). ಕಟ್ಟಡವು ಅನುಮತಿ ಪಡೆದ ನಕ್ಷೆಯಂತೆ ನಿರ್ಮಾಣವಾಗಿದೆಯೇ, ವಾಸಕ್ಕೆ ಸುರಕ್ಷಿತವಾಗಿದೆ ಎಂಬುದನ್ನು ಈ ಪತ್ರವು ದೃಢಪಡಿಸುತ್ತದೆ. ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳಿಗೆ ಈ ಪತ್ರವನ್ನು ನೀಡುವುದಿಲ್ಲ. ಸ್ವಾಧೀನಾನುಭವ ಪತ್ರ ಇಲ್ಲ ಎಂದರೆ ವಿದ್ಯುತ್ ಮತ್ತು ನೀರು, ಒಳಚರಂಡಿ ಸಂಪರ್ಕ ಸ್ಥಗಿತಗೊಳಿಸಲು ಆಯಾ ಇಲಾಖೆಗಳಿಗೆ ನಿರ್ದೇಶನವಿರುತ್ತದೆ.
ಸುಪ್ರೀಂ ಕೋರ್ಟ್ ಆದೇಶದಲ್ಲಿ ಏನಿದೆ?
“ಸ್ಥಳೀಯ ಆಡಳಿತ ಸಂಸ್ಥೆಗಳಿಮದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಮಾಣ ಆಗುತ್ತಿರುವ ಕಟ್ಟಡವನ್ನು ನಿರಂತವಾಗಿ ಪರಿಶೀಲನೆ ನಡೆಸಿ, ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಬಳಿಕವಷ್ಟೇ ಸ್ವಾಧೀನಾನುಭವ ಪತ್ರ ವಿತರಿಸಬೇಕು. ಕಟ್ಟಡ ನಿಯಮ ಉಲ್ಲಂಘಿಸಿ ನಿರ್ಮಾಣ ಆಗಿದ್ದರೆ ಒಸಿ ನೀಡದೇ, ಕ್ರಮ ಕೈಗೊಳ್ಳಬೇಕು. ಒಸಿ ವಿತರಣೆ ಬಳಿಕವಷ್ಟೇ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ, ಒಳಚರಂಡಿ ಸಂಪರ್ಕ ನೀಡಬೇಕು ” ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.
ಆನ್ಲೈನ್ ಮೂಲಕ ಸಿಸಿ, ಒಸಿ
ಬಿಬಿಎಂಪಿಯು ಆನ್ಲೈನ್ ಮೂಲಕವೇ ಕಟ್ಟಡ ನಕ್ಷೆ ಮಂಜೂರಾತಿ, ಕ್ಲಿಯರೆನ್ಸ್ ಸರ್ಟಿಫಿಕೇಟ್ (ಸಿಸಿ) ಮತ್ತು ಸ್ವಾಧೀನಾನುಭವ ಪ್ರಮಾಣಪತ್ರಗಳನ್ನು (ಒಸಿ) ನೀಡಲಿದೆ. ಕಳೆದ ಏಪ್ರಿಲ್ನಿಂದ ಈ ವ್ಯವಸ್ಥೆ ಜಾರಿಗೆ ಬಂದಿದ್ದು, ಬೆಂಗಳೂರು ನಗರದ ಬಿಎಂಆರ್ಡಿಎ ಕಚೇರಿಯಲ್ಲಿ ನಕ್ಷೆ ಹಾಗೂ ಮೇಲಿನ 2 ಪ್ರಮಾಣಪತ್ರ ವಿತರಣೆಯ ಆನ್ಲೈನ್ ಸೇವೆ ಆರಂಭಿಸಲಾಗಿದೆ.
ಕಾನೂನಿನ ಚೌಕಟ್ಟಿನಲ್ಲಿ ಅವಕಾಶ
”ಒಸಿ, ಸಿಸಿ ಕಡ್ಡಾಯಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಪಾಲಿಸುವ ಜತೆಗೆ ಕಾನೂನು ಚೌಕಟ್ಟಿನಲ್ಲಿ ಬಡವರಿಗೆ ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದು ಪರಿಶೀಲಿಸಲಾಗುವುದು. ಬಡವರು ಕಟ್ಟಿಕೊಂಡಿರುವ ಕಡಿಮೆ ವಿಸ್ತೀರ್ಣದ ಮನೆಗಳಿಗೆ ಒಸಿ, ಸಿಸಿಯಿಂದ ವಿನಾಯಿತಿ ನೀಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಇತರೆ ರಾಜ್ಯಗಳ ರೀತಿ ಬಲಿಷ್ಠವಾಗಿಲ್ಲ!
” ನಿಯಂತ್ರಣ ಪ್ರಾಧಿಕಾರದವರು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಗೂ ಬೆಸ್ಕಾಂಗೆ ಪತ್ರ ಬರೆದು ಒಸಿ ಹಾಗೂ ಸಿಸಿ ಸಲ್ಲಿಕೆ ನಂತರವೇ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು ಎಂದು ಸೂಚಿಸಿದರು. ನಾನು, ಮುಖ್ಯಮಂತ್ರಿಗಳು, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಸೇರಿ ಚರ್ಚೆ ಮಾಡಿದೆವು. ಈ ಸಮಸ್ಯೆ ನಿವಾರಣೆ ಮಾಡಬೇಕು ಎಂಬ ಪ್ರಯತ್ನ ನಮ್ಮ ಕಡೆಯಿಂದ ನಡೆಯುತ್ತಿದೆ. ಬೇರೆ ರಾಜ್ಯಗಳು ಜಾರಿ ಮಾಡಿಲ್ಲ, ನಾವು ಯಾಕೆ ಮಾಡಬೇಕು ಎಂದು ವಿರೋಧ ಪಕ್ಷದ ಶಾಸಕರು ಕೇಳಿದರು. ನಾವು ಉತ್ತರ ಪ್ರದೇಶ ಹಾಗೂ ಇತರೆ ರಾಜ್ಯಗಳ ರೀತಿ ಬಲಿಷ್ಠವಾಗಿಲ್ಲ. ಅಲ್ಲಿನ ರಾಜ್ಯ ಸರ್ಕಾರ ಹಾಗೂ ಕೇಂದ್ರದ ಸರ್ಕಾರ ನಿಮ್ಮದೇ ಇದೆ. ಹೀಗಾಗಿ ಅಲ್ಲಿ ಜಾರಿ ಮಾಡದಿದ್ದರೂ ಏನೂ ಮಾತನಾಡುವುದಿಲ್ಲ. ನಾವು ನ್ಯಾಯಾಲಯದ ಆದೇಶದ ವಿರುದ್ಧ ಹೋದರೆ ನಮ್ಮ ವಿರುದ್ಧ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿ ನಮಗೆ ಹಾಗೂ ನಮ್ಮ ಅಧಿಕಾರಿಗಳಿಗೆ ತೊಂದರೆಯಾಗಲಿದೆ” ಎಂದು ತಿಳಿಸಿದರು.
ಅಕ್ರಮ ಕಟ್ಟಡಗಳಿಂದ ಬೆಂಗಳೂರಿಗೆ ಹೆಚ್ಚು ಅಪಾಯ
“ಯಾವುದೇ ಅಕ್ರಮ ಕಟ್ಟಡ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬರುವ ಮುನ್ನ ಅರ್ಜಿ ಹಾಕಿ ಮನೆ ಕಟ್ಟಿರುವ ಬಡವರೂ ಇದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಇವರಿಗೆ ಯಾವ ರೀತಿ ನೆರವು ನೀಡಬಹುದು ಎಂದು ಪರಿಹಾರ ಕಂಡುಕೊಳ್ಳಲಾಗಿದೆ. ಹಾಗೆಂದು ಯಾರು ಎಷ್ಟು ಮಹಡಿ ಬೇಕಾದರೂ ಕಟ್ಟಲು ಅವಕಾಶವಿಲ್ಲ. ನಾನು ಇತ್ತೀಚೆಗಷ್ಟೇ ನಗರ್ತಪೇಟೆಗೆ ಹೋಗಿದ್ದೆ. ಅಲ್ಲಿ 20X25 ಅಡಿ ಜಾಗದಲ್ಲಿ ಎಂಟು ಮಹಡಿ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜನ ಸತ್ತಿದ್ದಾರೆ. ಬೆಂಗಳೂರಿಗೆ ಇದು ದೊಡ್ಡ ಅಪಾಯಕಾರಿ ವಿಚಾರ. ಈ ಕೋರ್ಟ್ ಆದೇಶದಿಂದಾದರೂ ಮುಂದೆ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯಲು ನಮ್ಮ ಬಳಿ ಅಕಾಶವಿದೆ. ಈ ರೀತಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಾವುಗಳು ಪ್ರೋತ್ಸಾಹ ನೀಡಬಾರದು. ಕೋರ್ಟ್ ಆದೇಶ ಪಾಲನ ಜೊತೆಗೆ ಕಾನೂನು ಚೌಕಟ್ಟಿನಲ್ಲಿ ಸ್ವಲ್ಪ ಸಡಿಲಿಕೆ, ವಿನಾಯಿತಿ ನೀಡಲು ಅನೇಕ ಕ್ರಮ ಕೈಗೊಳ್ಳಲಾಗಿದೆ” ಎಂದರು.


