ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನ ಪರಿಷತ್ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದ್ದು, ಈ ಹಿಂದೆ ಫೈನಲ್ ಮಾಡಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಡಲಾಗಿದೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್ಆರ್ಐ) ಉಪಾಧ್ಯಕ್ಷೆ ಆರತಿ ಕೃಷ್ಣ, ಮೈಸೂರು ಮೂಲದ ಶಿವಕುಮಾರ್ ಹಾಗೂ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ ಜಕ್ಕಪ್ಪ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ನಾನಾ ಕ್ಷೇತ್ರಗಳ ಸಾಧಕರ ಕೋಟಾದಲ್ಲಿ ನಾಮನಿರ್ದೇಶನಕ್ಕೆ ಹಲವು ಮಂದಿ ಆಕಾಂಕ್ಷಿಗಳಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮೂಲಕ ಸಂಭಾವ್ಯರ ಪಟ್ಟಿ ಪಡೆದುಕೊಂಡಿದ್ದ ಎಐಸಿಸಿ ವರಿಷ್ಠ ನಾಯಕರು ಈ ನಾಲ್ವರನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ ಅವರು ತಮ್ಮ ಆಪ್ತರ ಪರವಾಗಿ ಭಾರೀ ಲಾಬಿ ಮಾಡಿದ್ದರು. ರಮೇಶ್ ಬಾಬು, ಸಿಎಂ ಸಿದ್ದರಾಮಯ್ಯನವರ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಪತ್ರಕರ್ತ ದಿನೇಶ್ ಅಮಿನ್ಮಟ್ಟು, ದಲಿತ ಮುಖಂಡ ಡಿ.ಜಿ. ಸಾಗರ್ ಹಾಗೂ ರಾಜ್ಯ ಸರಕಾರದ ಅನಿವಾಸಿ ಭಾರತೀಯ ಕೋಶದ (ಎನ್ಆರ್ಐ) ಉಪಾಧ್ಯಕ್ಷೆ ಆರತಿ ಕೃಷ್ಣ ಅವರ ಹೆಸರು ಈ ಹಿಂದೆ ಫೈನಲ್ ಮಾಡಲಾಗಿದ್ದ ಪಟ್ಟಿಯಲ್ಲಿ ಇತ್ತು.
ಸಿದ್ದರಾಮಯ್ಯನವರ ತಮ್ಮ ಆಪ್ತ ದಿನೇಶ್ ಅಮಿನ್ಮಟ್ಟು ಅವರನ್ನ ಆಯ್ಕೆ ಮಾಡಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿ.ಜಿ. ಸಾಗರ್ ಪರವಾಗಿ ನಿಂತಿದ್ದರು. ಆದ್ರೆ ದಿನೇಶ್ ಅಮಿನ್ ಮಟ್ಟು ಆಯ್ಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ದಿನೇಶ್ ಅಮಿನ್ ಮಟ್ಟು ಹಾಗೂ ಸಾಗರ್ ಅವರನ್ನು ಕೈಬಿಡಲಾಗಿದೆ.


