ಬೆಂಗಳೂರು: 2019-20 ರಿಂದ 2022-23ರ ವರೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಸಂಬಂಧ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದರು.
ನ್ಯಾ. ಹೆಚ್.ಎನ್.ನಾಗಮೋಹನ್ ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗವು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಅವರಿಗೆ ತಮ್ಮ ವರದಿ ಸಲ್ಲಿಸಿತು. ಈ ವೇಳೆ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವ ಕೆ.ಹೆಚ್ ಮುನಿಯಪ್ಪ, ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.
ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23ರ ವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಉಪ ಮುಖ್ಯಮಂತ್ರಿಗಳು 2023ರಲ್ಲಿ ಟಿಪ್ಪಣಿ ಮೂಲಕ ಮುಖ್ಯಮಂತ್ರಿಗಳಿಗೆ ಕೋರಿದ್ದರು.
2023ರ ಆಗಸ್ಟ್ 5 ರಂದು ತಜ್ಞರನ್ನೊಳಗೊಂಡ 4 ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಪರಿಪೂರ್ಣ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. ಬಳಿಕ 2023ರ ಡಿಸೆಂಬರ್ 15 ರಂದು 4 ವಿಶೇಷ ತನಿಖಾ ಸಮಿತಿಗಳನ್ನು ಹಿಂಪಡೆದು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ತನಿಖೆಯನ್ನು ವರ್ಗಾಯಿಸಲಾಗಿತ್ತು.


