BBMP
Loading ...

Greater Bengaluru

Greater Bengaluru News9 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಡಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಪೂರ್ಣಗೊಳ್ಳುವವರೆಗೆ ನಗರದಲ್ಲಿ ಪ್ರಸ್ತಾವಿತ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮು೦ದೂಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ (ಎಸ್‌ಇಸಿ) ಜಿಎಸ್ ಸಂಗ್ರೇಶಿ ಅವರು, ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಅಡಿಯಲ್ಲಿ ಹೊಸದಾಗಿ ರಚಿಸಲಾದ ಐದು ಮಹಾನಗರ ಪಾಲಿಕೆಗಳ ಡಿಲಿಮಿಟೇಶನ್ ಪ್ರಕ್ರಿಯೆಯನ್ನು 2025ರ ನ.1ರೊಳಗೆ ಪೂರ್ಣಗೊಳಿಸಲು ಮತ್ತು ನ.30ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಂತೆಯೇ ನ.1ರೊಳಗೆ ಮತದಾರರ ಪಟ್ಟಿ ತಯಾರಿಕೆಯ ಕೆಲಸ ಪುನಾರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೂ ನಿರ್ದೇಶಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 ಮತ್ತು ಗ್ರೇಟರ್ ಬೆಂಗಳೂರು ಆಡಳಿತ (ಮತದಾರರನೋಂದಣಿ) ನಿಯಮಗಳು 2025ರ ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿ ಅಳವಡಿಸಿಕೊಳ್ಳುವ ಮುಖಾಂತರ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ತಯಾರಿಸುವ ಅಧಿಕಾರ ಹೊಂದಿದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ರದ್ದು ಹಾಗೂ ಸೇರ್ಪಡೆ ಕಾರ್ಯಕ್ಕೆ ರಾಜ್ಯ ಸರ್ಕಾರವು ಮಾನವಶಕ್ತಿ ಒದಗಿಸಲಿದೆ.

ಈ ನಡುವೆ ಕೇಂದ್ರ ಚುನಾವಣಾ ಆಯೋಗವು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಬೆಂಗಳೂರು ನಗರದಲ್ಲಿ ಪ್ರಸ್ತಾವಿತ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ನಡೆಸಿದರೆ, ಮಾನವಶಕ್ತಿ ಬಳಕೆಯಲ್ಲಿ ಸಮಸ್ಯೆಯಾಗಲಿದೆ. ರಾಜ್ಯ ಚುನಾವಣಾ ಆಯೋಗವು ವಾರ್ಡ್‌ವಾರು ಮತ್ತು ಮನೆ-ಮನೆ ಪರಿಶೀಲನೆ ಮೂಲಕ ಮತದಾರರ ಪಟ್ಟಿಯಲ್ಲಿ ಮತದಾರರ ಪರಿಷ್ಕರಣೆ, ಮಾರ್ಪಾಡು, ರದ್ದು ಹಾಗೂ ಸೇರ್ಪಡೆ ಮುಖಾಂತರ ಮತದಾರರ ಪಟ್ಟಿ ಸಿದ್ಧಪಡಿಸಲು ಮತ್ತು ಅಂತಿಮಗೊಳಿಸಲು ಮತ್ತೆ ಅದೇ ಮಾನವಶಕ್ತಿಯನ್ನು ನಿಯೋಜಿಸುವುದು ಕಷ್ಟವಾಗುತ್ತದೆ.

ಈ ಐದು ಮಹಾನಗರ ಪಾಲಿಕೆಗಳ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪಾಲಿಸುವುದು ರಾಜ್ಯ ಚುನಾವಣಾ ಆಯೋಗಕ್ಕೆ ಕಷ್ಟವಾಗಲಿದೆ ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *