Greater Bengaluru News9 : ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಜನ ಎಂಎಲ್ಎಗಳು ಅನರ್ಹವಾಗುವುದು ಖಚಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೊಸ ಬಾಂಬ್ ಸಿಡಿಸಿದರು.
ಸುಪ್ರೀಂ ಕೋರ್ಟ್ನಿಂದ ಸಿಎಂ ಸಿದ್ದರಾಮಯ್ಯಗೆ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ರು. ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನ ಕೊಡುತ್ತಿದ್ದಾರೆ ಎಂದು ಹೈಕೋರ್ಟ್ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು ಎಂದು ತಿಳಿಸಿದರು.
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ರು, ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್ನಲ್ಲಿ ಅಪಿಲ್ ಫೈಲ್ ಮಾಡಿದ್ದೆವು ಎಂದರು.
ಅಪಿಲ್ ವಿಚಾರಣೆ ಮಾಡಿದಂತಹ ಸುಪ್ರೀಂ ಕೋರ್ಟ್ ಇದರಲ್ಲಿ ಹಲವಾರು ತಪ್ಪುಗಳು, ಲೋಪದೋಷಗಳಿವೆ. ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಮಾಡಿರುವುದು ಅಪರಾಧ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಘನ ನ್ಯಾಯಾಲಯದ ನ್ಯಾಯದ ಮುಂದೆ ಯಾವುದೇ ಅಧಿಕಾರ, ಅಂತಸ್ತು ಉಳಿಯುವುದಿಲ್ಲ ಎಂಬುದಕ್ಕೆ ಪ್ರತ್ಯೆಕ್ಷ ಸಾಕ್ಷಿಯಾಗಿದೆ. ಅತೀ ಶೀಘ್ರದಲ್ಲೇ ಉಚಿತ ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ಗೆ ಹಾಜರಾಗಬೇಕಿದೆ ಎಂದು ಹೇಳಿದರು.


