Greater Bengaluru News9 : ರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಸಾಮಾಜಿಕ ಮಾಧ್ಯಮದ ಬಗ್ಗೆ ಹೆಚ್ಚುತ್ತಿರುವ ಗೀಳು ಮತ್ತು ಯುವ ಮನಸ್ಸುಗಳ ಮೇಲೆ ಅದರ ಪ್ರಭಾವವನ್ನು ಉಲ್ಲೇಖಿಸಿ ಸರ್ಕಾರ ಈ ಕುರಿತ ಕ್ರಮಕ್ಕೆ ಮುಂದಾಗಿದೆ.
ಈ ಕುರಿತ ಪ್ರಸ್ತಾವನೆಯು ಚರ್ಚೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ಯಾಂಪಸ್ಗಳಲ್ಲಿ ಅಪ್ರಾಪ್ತ ವಯಸ್ಕರು ಮೊಬೈಲ್ ಫೋನ್ಗಳ ಬಳಕೆಯನ್ನು ನಿಷೇಧಿಸಬೇಕೇ ಎಂಬ ಕುರಿತು ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳಿಂದ ಅವರು ಪ್ರತಿಕ್ರಿಯೆ ಪಡೆದಿದ್ದಾರೆ.
ಈ ಕುರಿತು ಚರ್ಚೆ ನಡೆಸುತ್ತಿದ್ದು, ನೀವೆಲ್ಲರೂ ಕುಲಪತಿಗಳಾಗಿರುವ ಕಾರಣ ನಿಮ್ಮ ಅಭಿಪ್ರಾಯ ಕೇಳುತ್ತೇನೆ. ಮಕ್ಕಳು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾದಂತಹ ವಿವಿಧ ದೇಶಗಳಲ್ಲೂ ವಿದ್ಯಾರ್ಥಿಗಳಲ್ಲೂ ಮೊಬೈಲ್ ನಿಷೇಧಿಸುವ ಚಿಂತನೆ ನಡೆದಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಬೇಕು. ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮದ ಬಗ್ಗೆ ಹೆಚ್ಚುತ್ತಿರುವ ಗೀಳಿನಿಂದ ನಡವಳಿಕೆ, ಶಿಕ್ಷಣದ ಫಲಿತಾಂಶಗಳು ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಮಾದಕ ದ್ರವ್ಯಗಳಿಗೆ ಒಡ್ಡಿಕೊಳ್ಳುವ ದುರ್ಬಲತೆಯನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.
ವಿಶೇಷವಾಗಿ ಮಕ್ಕಳು ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳ ಜವಾಬ್ದಾರಿಯುತ ಬಳಕೆ ಖಾತ್ರಿಗೆ ರಾಜ್ಯವು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
ಇತರ ರಾಜ್ಯಗಳಲ್ಲಿ ಇದೇ ರೀತಿಯ ಚರ್ಚೆಗಳ ನಡುವೆ ಕರ್ನಾಟಕವೂ ಇಂತಹ ನಿರ್ಧಾರಕ್ಕೆ ಮುಂದಾಗಿದೆ. ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಎಕ್ಸ್ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಪ್ರವೇಶಿಸದಂತೆ 16 ವರ್ಷದೊಳಗಿನ ಮಕ್ಕಳನ್ನು ನಿರ್ಬಂಧಿಸುವ ಪ್ರಸ್ತಾಪವನ್ನು ಗೋವಾ ಸರ್ಕಾರ ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಲ್ಲಿಅಪ್ರಾಪ್ತ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆ ಮೇಲೆ ಕಠಿಣ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಶಿಕ್ಷಣ ಸಚಿವ ನಾರಾ ಲೋಕೇಶ್ ತಿಳಿಸಿದ್ದಾರೆ.


