BBMP
Loading ...

lpg-gas-cylinder-lpg-gas-price

Greater Bengaluru News9 : ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು.

ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಗ್ಯಾಸ್ ಸಿಲಿಂಡರ್ ಪೂರೈಕೆ ಮತ್ತು ವಿತರಣೆಯಲ್ಲಿ ಉಂಟಾಗಿರುವ ಅಥವಾ ಉಂಟಾಗಬಹುದಾದ ಪರಿಸ್ಥಿತಿ ಕುರಿತು ಚರ್ಚಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆತಂಕದಿಂದ ಅತಿಯಾಗಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ. ಜಿಲ್ಲೆಯಲ್ಲಿ ವಿವಿಧ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ದಾಸ್ತಾನು ಲಭ್ಯವಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು. ಆದರೆ ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿರುವುದಿಲ್ಲ. ಗೃಹ ಉಪಯೋಗಿ ಅಡುಗೆ ಅನಿಲ ಸಿಲಿಂಡರ್ ಅನ್ನು ಬುಕ್ ಮಾಡಿದ 25 ದಿನದೊಳಗೆ ವಿತರಣೆ ಮಾಡಲಾಗುವುದು ಎಂದರು.

ಹೋಟೆಲ್‌ಗಳಲ್ಲಿ ಗ್ಯಾಸ್ ಹೊರತಾಗಿ ಸೋಲಾರ್ ಬಳಕೆ, ಬಯೋಗ್ಯಾಸ್ ಬಳಕೆಯನ್ನು ಮಾಡಲು ಅವಕಾಶವಿದ್ದು, ಈ ಬಗ್ಗೆ ಹೋಟೆಲ್‌ಗಳಿಗೆ ಸೂಕ್ತ ಅರಿವು ಮೂಡಿಸಬೇಕು. ಖಾಸಗಿ ಕಂಪನಿಗಳು ಗ್ಯಾಸ್ ಬಳಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಇದರ ಬದಲಿಗೆ ಸೋಲಾರ್ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಬೇಕು. ಅಗತ್ಯತೆಗಳಿಗೆ ತಕ್ಕಂತೆ ಅಡುಗೆ ಅನಿಲವನ್ನು ಬಳಕೆ ಮಾಡಲು ಮತ್ತು ಯಾವುದೇ ರೀತಿಯ ಗ್ಯಾಸ್ ವೇಸ್ಟ್ ಮಾಡದಿರಲು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಅಗತ್ಯ ಸೇವೆಗಳಾದ ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಅನಿಲ ಪೂರೈಕೆಗೆ ಮೊದಲ ಆದ್ಯತೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗೃಹೋಪಯೋಗಿ ಅನಿಲ ಸಿಲಿಂಡರ್ ವಿತರಣೆ ವೇಳೆ ಬಿಲ್ ಮೊತ್ತಕ್ಕಿಂತ ಹೆಚ್ಚು ಹಣ ತೆಗೆದುಕೊಳ್ಳುವಂತಿಲ್ಲ. ಹಾಗೇನಾದರೂ ತೆಗೆದುಕೊಂಡಲ್ಲಿ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು ಮಾಡುವುದಷ್ಟೇ ಅಲ್ಲದೇ ಲೈಸನ್ಸ್ ರದ್ದು ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಗ್ಯಾಸ್ ಏಜೆನ್ಸಿಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ, ಕನಕಗಿರಿ ತಾಲೂಕು ಸಿ.ಡಿ.ಪಿ.ಒ ವಿರುಪಾಕ್ಷಿ, ಸೇರಿದಂತೆ ತಹಶೀಲ್ದಾರರು, ಆಹಾರ ಇಲಾಖೆ ಸಿಬ್ಬಂದಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಐ.ಒ.ಸಿ., ಬಿ.ಪಿ.ಸಿ, ಹೆಚ್.ಪಿ.ಸಿ. ಗ್ಯಾಸ್ ಕಂಪನಿ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿ ಮಾಲೀಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *