Greater Bengaluru News9: ಮೇ 13ರಂದು ಬೆಂಗಳೂರು ಜನತೆಗೆ ಮಹತ್ವದ ಘೋಷಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ಜನರಿಗೆ ‘ಬಿಗ್ ಗಿಫ್ಟ್’ ನೀಡಲಾಗುವುದು ಎಂದು ಅವರು ಸುಳಿವು ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ರಾಜಕೀಯ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಸಭೆಯ ಬಳಿಕ ಅಧಿಕಾರಿಗಳನ್ನು ಕರೆದು ಅಗತ್ಯ ಸೂಚನೆಗಳನ್ನು ನೀಡಿರುವುದಾಗಿ ಹೇಳಿದ ಅವರು, “ಮೇ 13ರಂದು ಬೆಂಗಳೂರಿನ ಜನತೆಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ನೀಡಲಿದ್ದೇವೆ. ಅದರ ಸಂಪೂರ್ಣ ವಿವರವನ್ನು ಅಂದೇ ಬಹಿರಂಗಪಡಿಸುತ್ತೇನೆ” ಎಂದು ಹೇಳಿದರು.
ಈ ಹೇಳಿಕೆ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಅಥವಾ ಜನಪರ ಯೋಜನೆಗಳಿಗೆ ಸಂಬಂಧಿಸಿದ ಮಹತ್ವದ ಘೋಷಣೆ ಇರಬಹುದು ಎಂಬ ಕುತೂಹಲ ಮೂಡಿಸಿದೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಸಲಹೆಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
“ಪ್ರಧಾನಿ ಮೋದಿ ಜನರಿಗೆ ಸಲಹೆ ನೀಡುತ್ತಾರೆ. ಆದರೆ ಚಿನ್ನದ ಬೆಲೆ ಏಕೆ ಏರಿಕೆಯಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಪೆಟ್ರೋಲ್ ಬಳಕೆ ಕಡಿಮೆ ಮಾಡಿ ಎಂದು ಹೇಳುತ್ತಾರೆ. ಆದರೆ ಬೆಲೆ ಏರಿಕೆಯ ಕಾರಣವನ್ನು ವಿವರಿಸುವುದಿಲ್ಲ” ಎಂದು ಟೀಕಿಸಿದರು.
ಮುಂದುವರಿದು ಮಾತನಾಡಿದ ಅವರು, “ಮದುವೆ, ಮುಂಜಿ ಸೇರಿದಂತೆ ಕುಟುಂಬದ ಪ್ರಮುಖ ಕಾರ್ಯಕ್ರಮಗಳಿಗೆ ಚಿನ್ನ ಖರೀದಿಸಬೇಡಿ ಎಂದು ಜನರಿಗೆ ಹೇಳಲು ಸಾಧ್ಯವೇ? ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು” ಎಂದು ಹೇಳಿದರು.


