ನವದೆಹಲಿ: ಕರ್ನಾಟಕದ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇಂದು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿತ್ತು. ಈ ನಡುವೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಮಂಗಳವಾರ ನಡೆಸಿದ ಸುದೀರ್ಘ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಏನೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎಂಬ ಬಗ್ಗೆ ಕಾಂಗ್ರೆಸ್ ವರಿಷ್ಠರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಜತೆ ಹೈಕಮಾಂಡ್ ನಾಯಕರ ಮೀಟಿಂಗ್ ಬಳಿಕ ಡಿಕೆ ಶಿವಕುಮಾರ್ ಜತೆಗೂ ಪ್ರತ್ಯೇಕ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಹಾಜರಾಗಿದ್ದರು. ರಾಜ್ಯ ಸಭೆ, ವಿಧಾನ ಪರಿಷತ್ ಚುನಾವಣೆ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚೆಯಾಗಿದೆ. ಬೇರೆ ಏನೂ ಚರ್ಚೆಯಾಗಿಲ್ಲ. ನಿಮ್ಮ ಊಹಾಪೋಹಾ ಯಾವುದೂ ಸತ್ಯವಲ್ಲ ಎಂದು ಹೇಳಿದರು.
ಕರ್ನಾಟಕದ ರಾಜ್ಯಸಭಾ ಮತ್ತು ವಿಧಾನ ಪರಿಷತ್ ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಇತರ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯೊಂದಿಗೆ ಅಧಿಕೃತವಾಗಿ ಪ್ರಕಟಿಸಲಾಗುವುದು. ಇಂದಿನ ಸಭೆಯಲ್ಲಿ ನಾವು ಈ ವಿಷಯವನ್ನು ಮಾತ್ರ ತೀರ್ಮಾನಿಸಿದ್ದೇವೆ ಎಂದು ಹೇಳುವ ಮೂಲಕ ಕರ್ನಾನಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.
ಇನ್ನು ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಎಐಸಿಸಿ ಕಚೇರಿಯಿಂದ ನಿರ್ಗಮಿಸಿದರು. ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಡಿಸಿಎಂ ಹೊರನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.


