Greater Bengaluru News9 : ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ತೊರೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ತೊರೆಯಲ್ಲ. ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿರುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜೀನಾಮೆ ಪತ್ರದಲ್ಲಿ, “ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ” ಎಂದು ಬರೆದಿದ್ದಾರೆ. “ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ.
ಡಿ ಕೆ ಶಿವಕುಮಾರ್ ಸಂಪುಟ ಸೇರಿರುವ 13 ಸಚಿವರು ಬುಧವಾರವಷ್ಟೇ ಪ್ರಮಾಣವಚನ ಸ್ವೀಕರಿಸಿದ್ದರು. ಗುರುವಾರ ಖಾತೆ ಹಂಚಿಕೆಯಾಗಿದೆ. ಇದೀಗ ಎರಡು ದಿನದೊಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಕೊಡುವುದಾಗಿ ಹೇಳಿ ಮಾತಿಗೆ ತಪ್ಪಿದ್ದಾರೆ ಎಂದು ಈ ಹಿಂದೆಯೇ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಮಲಿಂಗಾರೆಡ್ಡಿ ಅವರು 2023ರಲ್ಲಿಯೇ ಬೆಂಗಳೂರು ಅಭಿವೃದ್ಧಿ ಖಾತೆ ನಿರೀಕ್ಷೆಯಲ್ಲಿದ್ದರು. ಆದರೆ ಸಿಕ್ಕಿರಲಿಲ್ಲ. ಈ ಬಾರಿಯಾದರೂ ಆ ಖಾತೆ ನೀಡಬಹುದು ಎಂಬ ನಿರೀಕ್ಷೆ ಅವರದ್ದಾಗಿತ್ತು.


