BBMP
Loading ...

gania

Greater Bengaluru News9: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಗಾಣಿಗ ಸಮುದಾಯದ ಕಾಂಗ್ರೆಸ್ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಅಖಿಲ ಭಾರತ ಗಾಣಿಗ ಸಮಾಜ ಸಂಘವು ಸರ್ಕಾರವನ್ನು ಬಲವಾಗಿ ಒತ್ತಾಯಿಸಿದೆ. ಬೆಂಗಳೂರಿನ ನಾಗರಬಾವಿಯಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಪ್ರಮುಖ ಪತ್ರಿಕಾಗೋಷ್ಠಿಯಲ್ಲಿ ಈ ಹಕ್ಕೊತ್ತಾಯ ಮಂಡಿಸಲಾಗಿದೆ. ರಾಜ್ಯಾದ್ಯಂತ ಸುಮಾರು 45 ರಿಂದ 50 ಲಕ್ಷ ಜನಸಂಖ್ಯೆ ಹೊಂದಿರುವ ಗಾಣಿಗ ಸಮುದಾಯವು, ಪ್ರತಿಯೊಂದು ವಿಧಾನಸಭಾ ಚುನಾವಣೆಯಲ್ಲೂ ಹತ್ತಾರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವನ್ನು ನಿರ್ಧರಿಸುವ ದಿಕ್ಸೂಚಿಯಾಗಿದೆ ಎಂದು ಸಂಘದ ಮುಖಂಡರು ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯದ ಪ್ರಮುಖ ಮುಖಂಡರಾದ ಶ್ರೀ ಲಕ್ಷ್ಮಣ ಸವದಿ, ಶ್ರೀ ಬಿ.ಕೆ. ಸಂಗಮೇಶ್ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಪಪ್ಪಿ ಅವರು ಭಾರಿ ಬಹುಮತದೊಂದಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಿದ ಬಳಿಕ ಉತ್ತರ ಕರ್ನಾಟಕ ಭಾಗದ ಸುಮಾರು 18 ರಿಂದ 20 ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ಮತ್ತು ಗಾಣಿಗ ಸಮುದಾಯದ ಮತಗಳ ಕ್ರೋಡೀಕರಣಕ್ಕೆ ಪ್ರಮುಖ ಕಾರಣಕರ್ತರಾಗಿದ್ದಾರೆ. ಆದ್ದರಿಂದ, ಹೈಕಮಾಂಡ್ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರಿಗೆ ಈ ಬಾರಿಯೂ ಉಪಮುಖ್ಯಮಂತ್ರಿ ಸ್ಥಾನದೊಂದಿಗೆ ಪ್ರಭಾವಿ ಸಚಿವ ಸ್ಥಾನ ನೀಡಬೇಕು ಎಂದು ಸಂಘಟನೆಯು ಕಳಕಳಿಯಿಂದ ಆಗ್ರಹಿಸಿದೆ.

ಇದೇ ವೇಳೆ, ಭದ್ರಾವತಿ ಕ್ಷೇತ್ರದಿಂದ ನಾಲ್ಕು ಬಾರಿ ನಿಷ್ಠಾವಂತ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಬಿ.ಕೆ. ಸಂಗಮೇಶ್ ಅವರಿಗೆ ಇದುವರೆಗೆ ಯಾವುದೇ ಸಚಿವ ಸ್ಥಾನ ನೀಡದೆ ಕೇವಲ ಕೆ.ಐ.ಆರ್.ಡಿ.ಎಲ್. ಅಧ್ಯಕ್ಷ ಸ್ಥಾನಕ್ಕೆ ಸೀಮಿತಗೊಳಿಸಿರುವುದು ಸಮುದಾಯಕ್ಕೆ ಮಾಡಿದ ಅವಮಾನ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷದ ನಿಷ್ಠಾವಂತ ನಾಯಕರಾದ ಡಿ.ಕೆ. ಶಿವಕುಮಾರ್ ಅವರಿಗೆ ಮನ್ನಣೆ ನೀಡಿದ ಮಾದರಿಯಲ್ಲೇ, ಬಿ.ಕೆ. ಸಂಗಮೇಶ್ ಅವರಿಗೂ ಸಚಿವ ಸ್ಥಾನ ನೀಡಿ ಗಾಣಿಗರ ಅಭಿವೃದ್ಧಿಗೆ ಬೆಂಬಲ ಸೂಚಿಸಬೇಕು. ಹಾಗೆಯೇ, ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ಮಾಡುತ್ತಿರುವ ರಾಜಕೀಯ ಪ್ರೇರಿತ ಆರೋಪಗಳನ್ನು ಬದಿಗಿಟ್ಟು, ಅವರಿಗೂ ಸಂಪುಟದಲ್ಲಿ ಸ್ಥಾನ ನೀಡಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖಂಡರು ವಿನಂತಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಸಂಘವು ಜಂಟಿ ಮನವಿ ಮಾಡಿದೆ. ಪ್ರಸ್ತುತ ಆಯ್ಕೆಯಾಗಿರುವ ಸಮುದಾಯದ ಮೂವರು ಶಾಸಕರಲ್ಲಿ ಕನಿಷ್ಠ ಇಬ್ಬರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬೇಡಿಕೆಯನ್ನು ನಿರ್ಲಕ್ಷಿಸಿ ಗಾಣಿಗ ಸಮುದಾಯಕ್ಕೆ ಅನ್ಯಾಯ ಮಾಡಿದರೆ, ಬರುವ ಜೂನ್ 15, 2026 ರಂದು ರಾಜ್ಯದಾದ್ಯಂತ ಇರುವ ಸುಮಾರು 10,000 ಸಮುದಾಯದ ಯುವಕರೊಂದಿಗೆ ವಿಧಾನಸೌಧ ಮುತ್ತಿಗೆ ಹಾಕುವ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘವು ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದೆ.

ಈ ಹೋರಾಟ ಕೇವಲ ಪ್ರತಿಭಟನೆಗೆ ಸೀಮಿತವಾಗದೆ, ರಾಜಕೀಯವಾಗಿಯೂ ಕಾಂಗ್ರೆಸ್‌ಗೆ ಭಾರಿ ಹೊಡೆತ ನೀಡಲಿದೆ ಎಂದು ಸಂಘಟನೆ ತಿಳಿಸಿದೆ. ಬೇಡಿಕೆ ಈಡೇರದಿದ್ದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಗಾಣಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಬಹಿಷ್ಕರಿಸಲಿದೆ ಎಂದು ಎಚ್ಚರಿಸಲಾಗಿದೆ. “ಅನಾದಿ ಕಾಲದಿಂದಲೂ ಮನೆ ಮನೆಗೂ ಜ್ಯೋತಿ ನೀಡಿದ ಗಾಣಿಗರನ್ನು ಕಡೆಗಣಿಸಿದರೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜಕೀಯ ದೀಪ ಆರಲು ಸಮುದಾಯವೇ ಕಾರಣವಾಗಲಿದೆ” ಎಂದು ಮುಖಂಡರು ಮಾರ್ಮಿಕವಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಹಿಂದುಳಿದ ವರ್ಗಗಳ ಧ್ವನಿಯಾಗಿರುವ ಬಿ.ಕೆ. ಹರಿಪ್ರಸಾದ್ ಅವರು ಸಮುದಾಯದ ಪರವಾಗಿ ನಿಲ್ಲಬೇಕು ಹಾಗೂ ಈ ಹಿಂದೆ ವಿ.ಆರ್. ಸುದರ್ಶನ್ ಅವರಿಗೆ ಸಭಾಪತಿ ಸ್ಥಾನ ನೀಡಿ ಗೌರವಿಸಿದಂತೆ ಈಗಲೂ ಪಕ್ಷ ಗಾಣಿಗರನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಈ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವ ಅಧ್ಯಕ್ಷರಾದ ಡಾ. ಶೇಖರ್ ಸಜ್ಜನ್, ಅಧ್ಯಕ್ಷರಾದ ಗುರಣ್ಣ ಗೋಡಿ, ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ಉಪಸ್ಥಿತರಿದ್ದರು. ಇವರೊಂದಿಗೆ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಎಂ.ಆರ್. ರಾಜಶೇಖರ್, ಹಿರಿಯ ಮುಖಂಡರಾದ ಜಿ.ಎಸ್. ಅಮರನಾಥ್, ಹೊಸಕೋಟೆ ಅಶೋಕ್ ಕುಮಾರ್, ಡಾ. ಯೋಗೇಶ್, ನರಸಿಂಹಯ್ಯ, ಮಂಗಳೂರು ಕಾಂಗ್ರೆಸ್ ಮುಖಂಡ ವಿಶ್ವಾಸ್ ದಾಸ್, ಬಿಡದಿ ಆರ್. ಶಂಕರ್, ಸುವರ್ಣ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ಆನಂದ ಕೆ. ಮಂಡ್ಯ, ಭದ್ರಾವತಿ ತಾಲೂಕು ಅಧ್ಯಕ್ಷ ಟಿ. ವೆಂಕಟೇಶ್ ಮತ್ತು ಕರ್ನಾಟಕ ಗಾಣಿಗರ ಏಕತಾ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಬಿ.ಕೆ. ಮುರಳಿಕೃಷ್ಣ ಸೇರಿದಂತೆ ನಾಡಿನ ಹಲವು ಪ್ರಮುಖ ಮುಖಂಡರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.

Leave a Reply

Your email address will not be published. Required fields are marked *