Greater Bengaluru News9: ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಜೂ.27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರಿಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ವರ್ಷದಂತೆ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಎಲ್ಲಾ ಸಂಘಟನೆಗಳ ಜೊತೆ ಚರ್ಚೆ ಮಾಡಲಾಗಿದೆ. ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಭೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ. ಇನ್ನು ಮೂರನೇ ತಂಡವನ್ನು ಸ್ಥಳೀಯ ಶಾಸಕರಾದ ಬಾಲಕೃಷ್ಣ ಹುಲಿಯೂರು ದುರ್ಗ ಕಡೆಯಿಂದ ರಂಗನಾಥ್ ಅವರು ಮುನ್ನಡೆಸಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಕ್ರಮವನ್ನು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರಿಂದ ನಡೆಸಲಾಗುವುದು. ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ತಯಾರಿ ಮಾಡಲಾಗುವುದು ಎಂದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಅದರ ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಯಂತಿ ಆಚರಿಸಲಾಗುವುದು. ಇದಕ್ಕಾಗಿ 1 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೊಂದು ದಿನ ಬೆಂಗಳೂರಿನ 369 ವಾರ್ಡ್ಗಳಲ್ಲಿ ಈ ಕಾರ್ಯಕ್ರಮ ನಡೆಸಲು ಬಿಬಿಎಂಪಿ ವತಿಯಿಂದ ತಲಾ 1 ಲಕ್ಷ ಅನುದಾನ ನೀಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಬೆಂಗಳೂರು ನಗರದ ಸಚಿವರು ತೀರ್ಮಾನ ಮಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ ಎಂದರು.
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಥೀಮ್ ಪಾರ್ಕ್ ಪೂರ್ಣಗೊಂಡಿದ್ದು, ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲು ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ತಯಾರಿ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಗಣ್ಯರು, ಸ್ವಾಮೀಜಿಗಳು ಹಾಗೂ ನಾಯಕರ ಆಹ್ವಾನದ ಜವಾಬ್ದಾರಿಯನ್ನು ಕೃಷ್ಣ ಬೈರೇಗೌಡರು ವಹಿಸಿಕೊಂಡಿದ್ದಾರೆ. ಸಂಘಟನೆಗಳು ಹಾಗೂ ಒಕ್ಕಲಿಗರ ಸಂಘ ತಮ್ಮದೇ ಆದ ಜವಾಬ್ದಾರಿ ಹೊತ್ತುಕೊಂಡಿವೆ. ಈ ಕಾರ್ಯಕ್ರಮ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಲ್ಲ, ಕೆಂಪೇಗೌಡರು ಬೆಂಗಳೂರು ನಗರ ಹಾಗೂ ರಾಜ್ಯದ ಆಸ್ತಿ. ಎಲ್ಲಾ ಧರ್ಮ, ಜಾತಿ, ಸಂಘಟನೆಯವರು ಸೇರಿ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿನ ಪ್ರಮುಖ ಸಲಹೆಗಳು
- ನಾಡಪ್ರಭು ಕೆಂಪೇಗೌಡ ಅವರನ್ನು ಬೆಂಗಳೂರಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ.
- ಎಲ್ಲಾ ಜಿಲ್ಲೆಗಳಲ್ಲಿ ಕೆಂಪೇಗೌಡ ಜಿಲ್ಲಾ ಭವನ ನಿರ್ಮಾಣ, ಕೆಂಪೇಗೌಡರ ವಸ್ತುಸಂಗ್ರಹಾಲಯ.
- ಕೆಂಪೇಗೌಡರ ಹೆಸರಿನಲ್ಲಿ ಅಂತರಾಷ್ಟ್ರೀಯ ಉದ್ಯಾನವನ ಹಾಗೂ ಅಂತರಾಷ್ಟ್ರೀಯ ಸಮುದಾಯ ಭವನ ನಿರ್ಮಾಣ.
- ಕೆಂಪೇಗೌಡರ ಸ್ಮರಣೆಯಲ್ಲಿ ಬೆಂಗಳೂರಿನ ಕೆರೆಗಳ ಶುದ್ಧೀಕರಣ, ಪುನಶ್ಚೇತನ.
- ಸ್ವಾಮಿನಾಥನ್ ವರದಿ ಆಧರಿಸಿ ಜಲ ನಿರ್ವಹಣೆ ಬಗ್ಗೆ ಬೆಂಗಳೂರಿಗರಿಗೆ ಜಾಗೃತಿ ಮೂಡಿಸಲು ಕಾರ್ಯಾಗಾರ.
- ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಜೀವನ ಚರಿತ್ರೆ, ಜಯಂತಿಯಂದು ಸರ್ಕಾರಿ ರಜೆ ಘೋಷಣೆ.
- ನಗರದ ನಾಲ್ಕು ದಿಕ್ಕಿನಲ್ಲಿ 50-60 ಅಡಿ ಎತ್ತರದ ಕೆಂಪೇಗೌಡರ ಕಲ್ಲಿನ ಪ್ರತಿಮೆ ನಿರ್ಮಾಣ.
- ಬೆಂಗಳೂರು ಗ್ರಾಮಾಂತರ ಜಿಲ್ಲೆ ಅವಳಿ ಗ್ರಾಮ ಅಭಿವೃದ್ಧಿ ಮಾಡಲು ಸಭೆಯಲ್ಲಿ ಸಲಹೆ.
ಕೆಂಪೇಗೌಡರ ಸಮಾಧಿ 10 ಎಕರೆ ಜಾಗದಲ್ಲಿ ಅಭಿವೃದ್ಧಿ
ಕೆಂಪೇಗೌಡರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅನೇಕ ಸಲಹೆಗಳು ವ್ಯಕ್ತವಾಗಿದ್ದು, ಕೆಂಪೇಗೌಡ ಸಮಾಧಿ ಸ್ಥಳವನ್ನು 10 ಎಕರೆ ಜಾಗದಲ್ಲಿ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಕೆಂಪೇಗೌಡರ ಕೋಟೆ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದ ಟೆಂಡರ್ ಆಗಿದ್ದು, ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಬೇಕು ಎಂಬ ವಿಚಾರಗಳು ಚರ್ಚೆಯಾದವು.


