BBMP
Loading ...

gruha jyothi

Greater Bengaluru News9 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಬಾಡಿಗೆದಾರರಲ್ಲಿ ಉಂಟಾಗಿದ್ದ ಗೊಂದಲಕ್ಕೆ ಬೆಸ್ಕಾಂ ತೆರೆ ಎಳೆದಿದೆ. ಹಳೆಯ ಬಾಡಿಗೆದಾರರ ಆಧಾರ್ ವಿವರಗಳಿದ್ದರೂ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತಗೊಳ್ಳುವುದಿಲ್ಲ. ಮನೆ ಮನೆಗೆ ಭೇಟಿ ನೀಡುವ ಬೆಸ್ಕಾಂ ಸಿಬ್ಬಂದಿಯೇ ಹಳೆಯ ದಾಖಲೆಗಳನ್ನು ತೆಗೆದುಹಾಕಿ, ಪ್ರಸ್ತುತ ವಾಸಿಸುತ್ತಿರುವ ಬಾಡಿಗೆದಾರರ ಆಧಾರ್ ಹಾಗೂ ಅಗತ್ಯ ಮಾಹಿತಿಯನ್ನು ನವೀಕರಿಸಲಿದ್ದು, ಫಲಾನುಭವಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಹೌದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026 ರಿಂದ ಆರಂಭಗೊಂಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಗೊಂದಲ ಪಡಬೇಕಾಗಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು, ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.

ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಸಮೀಕ್ಷೆ ವೇಳೆ ಹಳೆಯ ಬಾಡಿಗೆದಾರರ ಆಧಾರ್ ಕಾರ್ಡ್ ಮತ್ತು ವಿವರಗಳನ್ನು ತೆಗೆದುಹಾಕಿ, ಹೊಸ ಬಾಡಿಗೆದಾರರ ಆಧಾರ್ ಸಂಖ್ಯೆ ನಮೂದು ಮಾಡಿಕೊಳ್ಳಲಾಗುವುದು. ಹೀಗಾಗಿ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ನಿಲ್ಲುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಯಾವುದೇ ಕಚೇರಿಗೆ ಹೋಗಬೇಕಾದ ಅಗತ್ಯವಿಲ್ಲ. ಬೆಸ್ಕಾಂ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆಯ ಸಮಯದಲ್ಲಿ ನಿಮ್ಮ ಆಧಾರ್ ಮತ್ತು ಬಾಡಿಗೆ/ ಲೀಸ್ ಕರಾರು ವಿವರಗಳನ್ನು ಅಪ್‌ಡೇಟ್ ಮಾಡಲಿದ್ದಾರೆ. ಈ ಪ್ರಕ್ರಿಯೆ ಕೇವಲ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದ್ದರಿಂದ ಬಾಡಿಗೆದಾರರು ಯಾವುದೇ ಆತಂಕವಿಲ್ಲದೆ ಬೆಸ್ಕಾಂ ತಂಡಕ್ಕೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕಾಗಿ ವಿನಂತಿ. ಜೊತೆಗೆ ಮನೆ ಮಾಲೀಕರು ಕೂಡ ತಮ್ಮ ಬಾಡಿಗೆದಾರರಿಗೆ ಈ ಪ್ರಕ್ರಿಯೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಬೆಂಬಲಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ-ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ/ ಸಂದೇಶ ಕಳುಹಿಸಬಹುದು.

  • ಬೆಸ್ಕಾಂ ಸಹಾಯವಾಣಿ ಸಂಖ್ಯೆ: 1912
  • ವಿಶೇಷ ವಾಟ್ಸಾಪ್ (WhatsApp) ಸಂಖ್ಯೆಗಳು: 9480816111, 9480816112, 9480816113, 9480816114

(ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಲಭ್ಯವಿರುತ್ತದೆ).

ಪ್ರಮುಖಾಂಶಗಳು

  • ಜುಲೈ 1, 2026ರಿಂದ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ದಾಖಲೆ ಪರಿಶೀಲನೆ ಆರಂಭ.
    ಬಾಡಿಗೆದಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಸ್ಕಾಂ ಸ್ಪಷ್ಟನೆ.
  • ಹಳೆಯ ಬಾಡಿಗೆದಾರರ ಆಧಾರ್ ವಿವರಗಳನ್ನು ತೆಗೆದು, ಹೊಸ ಬಾಡಿಗೆದಾರರ ಮಾಹಿತಿಯನ್ನು ಅಪ್‌ಡೇಟ್ ಮಾಡಲಾಗುತ್ತದೆ.
  • ದಾಖಲೆ ನವೀಕರಣದಿಂದ ಗೃಹ ಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತವಾಗುವುದಿಲ್ಲ.
    ದಾಖಲೆ ಬದಲಾವಣೆಗೆ ಬಾಡಿಗೆದಾರರು ಬೆಸ್ಕಾಂ ಕಚೇರಿಗೆ ಹೋಗುವ ಅಗತ್ಯವಿಲ್ಲ.
  • ಮನೆ ಮನೆಗೆ ಭೇಟಿ ನೀಡುವ ಬೆಸ್ಕಾಂ ಸಿಬ್ಬಂದಿಯೇ ಆಧಾರ್ ಹಾಗೂ ಬಾಡಿಗೆ/ಲೀಸ್ ವಿವರಗಳನ್ನು ಪರಿಶೀಲಿಸಿ ಅಪ್‌ಡೇಟ್ ಮಾಡಲಿದ್ದಾರೆ.
  • ಈ ಪ್ರಕ್ರಿಯೆ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸುವ ಸಾಮಾನ್ಯ ಸಮೀಕ್ಷೆ ಮಾತ್ರ ಎಂದು ಬೆಸ್ಕಾಂ ತಿಳಿಸಿದೆ.
  • ಬಾಡಿಗೆದಾರರು ಮತ್ತು ಮನೆ ಮಾಲೀಕರು ಬೆಸ್ಕಾಂ ಸಿಬ್ಬಂದಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಮನವಿ.

Leave a Reply

Your email address will not be published. Required fields are marked *