Greater Bengaluru News9 : ಕೊಟ್ಟಿಗೆಪಾಳ್ಯದಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಘಟನೆಯ ವಿವರಗಳನ್ನು ನೀಡಿದ್ದಾರೆ.
ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕೊಟ್ಟಿಗೆಪಾಳ್ಯದಲ್ಲಿರುವ ಮನೆಯೊಂದರಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಪರಿಶೀಲನೆಯಲ್ಲಿ ಮೂರು ಮಂದಿ ಕೊಲೆಯಾಗಿದ್ದು, ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ನಡೆದ ಮನೆಯಲ್ಲಿ ಒಟ್ಟು ಐವರು ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಯಜಮಾನ ಚಿಕ್ಕಣ್ಣ ಅವರು ಬೆಳಗ್ಗೆ ಸುಮಾರು 6 ಗಂಟೆಗೆ ಕೆಲಸಕ್ಕೆ ತೆರಳಿದ್ದರು. ಆ ವೇಳೆ ಮನೆಯಲ್ಲಿ ಅವರ ಪುತ್ರ, ಪತ್ನಿ, ಅತ್ತೆ ಹಾಗೂ ಬಾಮೈದ ಇದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಮೇಲಂತಸ್ತಿನಲ್ಲಿ ವಾಸವಾಗಿದ್ದವರು ಶಬ್ದ ಕೇಳಿ ಕೆಳಗೆ ಬಂದು ನೋಡಿದಾಗ, ಮನೆಯ ಬಾಗಿಲು ಬಳಿ ಎರಡು ಮೃತದೇಹಗಳು ಬಿದ್ದಿರುವುದನ್ನು ಗಮನಿಸಿದ್ದಾರೆ. ಅಲ್ಲದೆ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಮೂವರು ಮೃತಪಟ್ಟಿದ್ದು, ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. ಮೃತರೆಲ್ಲರ ದೇಹಗಳ ಮೇಲೂ ಮಚ್ಚಿನಿಂದ ಹಲ್ಲೆ ನಡೆಸಿದ ಗುರುತುಗಳು ಪತ್ತೆಯಾಗಿವೆ ಎಂದು ಡಿಸಿಪಿ ಯತೀಶ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ಕಾರಣವೇನು, ಘಟನೆಯ ಹಿಂದಿನ ಹಿನ್ನೆಲೆ ಏನು ಎಂಬ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


