Greater Bengaluru News9: ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ಸಹಾಯಕ ಎಂಜಿನಿಯರ್ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ಉಪವಿಭಾಗದ ಶುಗರ್ ಟೌನ್ ಶಾಖೆಯ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ಅವರು ‘ಅಭಿವೃದ್ಧಿ ಶುಲ್ಕ ಸೇರಿಸಿದರೆ 75 ಸಾವಿರ ರೂ. ಕಟ್ಟಬೇಕಾಗುತ್ತದೆ. ಹೀಗಾಗಿ ಅದಕ್ಕೆ ವಿನಾಯಿತಿ ನೀಡಲು 30 ಸಾವಿರ ರೂ. ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ’ ಎಂದು ಮಂಡ್ಯ ನಗರದ ಎಂ.ರಾಜಗೋಪಾಲ ನಾಯ್ಡು ಅವರು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಸೋಮವಾರ ಕಾರ್ಯಾಚರಣೆ ನಡೆಯಿತು. ಶ್ರೀನಿವಾಸ್ ಅವರನ್ನು ಸ್ಥಳದಲ್ಲೇ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗುವುದು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.


