Greater Bengaluru News9 : ರಾಜ್ಯದಲ್ಲಿ ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ ಸುಳಿವು ನೀಡಿದೆ.
ಇತ್ತೀಚಿನ ದಿನಗಳಲ್ಲಿ ಸುಮಾರು ಆರು ಬಾರಿ ಡೀಸೆಲ್ ದರ ಹೆಚ್ಚಳವಾಗಿದ್ದು, ಇದರಿಂದಾಗಿ ರಾಜ್ಯದ ಸಾರಿಗೆ ಇಲಾಖೆಗೆ ವಾರಕ್ಕೆ ಬರೋಬ್ಬರಿ 7 ಕೋಟಿ ರೂಪಾಯಿಗಳ ಭಾರಿ ನಷ್ಟ ಉಂಟಾಗುತ್ತಿದೆ. ಈ ನಷ್ಟವನ್ನು ಸರಿದೂಗಿಸಲು ಟಿಕೆಟ್ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು, ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಮತ್ತು ಡೀಸೆಲ್ ಬೆಲೆ ಏರಿಕೆಯ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ವಿಶೇಷ ಸಮಿತಿಯೊಂದನ್ನು ರಚಿಸಿದೆ. ಸಾರಿಗೆ ಇಲಾಖೆಯ ವ್ಯಾಪ್ತಿಗೆ ಬರುವ ನಾಲ್ಕೂ ರಸ್ತೆ ಸಾರಿಗೆ ನಿಗಮಗಳಿಂದ (KSRTC, BMTC, NWKRTC, KKRTC) ಸಮಗ್ರ ವರದಿ ಬರಬೇಕಾಗಿದೆ. ಈ ವರದಿ ಕೈಸೇರಿದ ನಂತರವಷ್ಟೇ ಯಾವ ಪ್ರಮಾಣದಲ್ಲಿ ಟಿಕೆಟ್ ದರ ಹೆಚ್ಚಿಸಬೇಕು ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ.
ಸಮಿತಿಯ ವರದಿ ಬಂದ ತಕ್ಷಣ, ದರ ಏರಿಕೆಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ತದನಂತರ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗದಂತೆ ಟಿಕೆಟ್ ದರ ಹೆಚ್ಚಳದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.


