ಬೆಂಗಳೂರು: ಡಿಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರಗೇಟು ನೀಡಿದ್ದಾರೆ. ಸಿಎಂ ಯಾರು ಎಂದು ನಿರ್ಧಾರ ಮಾಡುವವರು ಹೈಕಮಾಂಡ್ ಎಂದು ಅವರತ್ತ ಬೊಟ್ಟು ಮಾಡಿದ್ದಾರೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯವರು ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದರು.
ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.
ಅಲ್ಲದೆ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಸ್ವಾಮೀಜಿ ಅವರು ಆಗ್ರಹಿಸಿದ್ದರು. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಡಿಕೆಶಿ ಸಿಎಂ ಆಗಲಿದ್ದಾರೆ. ಇಲ್ಲಾಂದ್ರೆ ಸಾಧ್ಯವಿಲ್ಲ ಎಂದು ಹೇಳಿದ್ದರು.
ಹೈಕಮಾಂಡ್ ತೀರ್ಮಾನ ಅಂತಿಮ
ಈ ವಿಚಾರವಾಗಿ ಕಾರ್ಯಕ್ರಮದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಬಳಿ ಪ್ರಶ್ನೆ ಕೇಳಿದಾಗ, ಸ್ವಾಮೀಜಿ ಹೇಳಲಿ, ಆದರೆ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಅಂತಿಮ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಡಿಸಿಎಂ ಹೆಚ್ಚುವರಿ ಹುದ್ದೆಗಳ ಸೃಷ್ಟಿಯ ಬಗ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಬಣದ ಸಚಿವರು ಈ ಬೇಡಿಕೆಗಳನ್ನು ತೀವ್ರಗೊಳಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ತಮ್ಮ ಹಕ್ಕೋತ್ತಾಯ ಮಾಡಿದ್ದಾರೆ.
ಈ ನಡುವೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯವರು ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ಸ್ವತಃ ಸಿದ್ದರಾಮಯ್ಯ ಅವರ ಮುಂದೆಯೇ ಬೇಡಿಕೆ ಇಟ್ಟಿರುವುದು ಹೊಸ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಎರಡುವರೆ ವರ್ಷದ ಬಳಿಕ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಸಿದ್ದರಾಮಯ್ಯ ಬಣ ಇದನ್ನು ನಿರಾಕರಿಸುತ್ತಲೇ ಬಂದಿದೆ.
ಡಿಕೆ ಶಿವಕುಮಾರ್ ಅವರ ಶಕ್ತಿಯನ್ನು ಕುಗ್ಗಿಸುವ ಸಲುವಾಗಿ ಸಿದ್ದರಾಮಯ್ಯ ಬಣದ ಸಚಿವರು ಪದೇ ಪದೇ ಹೆಚ್ಚುವರಿ ಡಿಸಿಎಂ ವಿಚಾರವನ್ನು ಮುನ್ನಲೆಗೆ ತರುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಬಗ್ಗೆ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ಕೆಎನ್ ರಾಜಣ್ಣ ಈ ವಿಚಾರ ಪ್ರಸ್ತಾಪಿಸಿದ್ದರು. ಇಂತಹ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಬಣ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬೇಡಿಕೆಗೆ ಸಿಎಂ ಸ್ಥಾನದ ಬೇಡಿಕೆಯನ್ನು ಮುಂದಿಟ್ಟುಕೊಂಡು ಚರ್ಚೆಯನ್ನು ಮುನ್ನಲೆಗೆ ತರುವ ಸಾಧ್ಯತೆ ಇದೆ. ಈಗಾಗಲೇ ಡಿಕೆಶಿ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಬಸವರಾಜ ಶಿವಗಂಗಾ ಡಿಕೆಶಿಯನ್ನು ಸಿಎಂ ಮಾಡಿ ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ.
ಹಾವೇರಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನಕ್ಕೆ ಡಿಕ್ಕಿ, 13 ಜನರು ಸಾವು


