ಬೆಂಗಳೂರು: ಕೇಂದ್ರ ಒಕ್ಕಲಿಗ ಸಂಘದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿ.ಎನ್. ಬಾಲಕೃಷ್ಣೇಗೌಡರು ಮತ್ತು ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ಪರಮಪೂಜ್ಯ ನಂಜಾವಧೂತ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ನಿನ್ನೆಯಷ್ಟೇ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರು ಹಾಗೂ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ಆಶೀರ್ವಾದವನ್ನು ಪಡೆಯಲಾಗಿತ್ತು. ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಕ್ರಮಣ ಗುರುವಂದನಾ ಬಳಗದ ವತಿಯಿಂದ ಆಯೋಜಿಸಲಾದ “ಸತ್ಸಂಗ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಆಶೀರ್ವಾದ ಪಡೆಯಲಾಯಿತು.
ಇತ್ತೀಚೆಗಷ್ಟೇ ನಡೆದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದರು. ಉಪಾಧ್ಯಕ್ಷರಾಗಿ ಆರ್. ಪ್ರಕಾಶ್, ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಸಿ. ದೇವರಾಜು, ಸಹಾಯಕ ಕಾರ್ಯದರ್ಶಿಯಾಗಿ ಆರ್. ಹನುಮಂತರಾಯಪ್ಪ, ಖಜಾಂಚಿಯಾಗಿ ಎಂ.ಎಸ್. ಉಮಾಪತಿ ಆಯ್ಕೆಯಾದರು.
ಎರಡನೇ ಬಾರಿ ಅಧ್ಯಕ್ಷ: 2021ರ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದ ಸಿ.ಎನ್. ಬಾಲಕೃಷ್ಣ, 2022ರ ಜನವರಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋನಪ್ಪ ರೆಡ್ಡಿ ಉಪಾಧ್ಯಕ್ಷರಾಗಿದ್ದರು. ಈ ಸಮಿತಿಯ ವಿರುದ್ಧ ಕೆಂಚಪ್ಪ ಗೌಡ ಬಣವು ಅವಿಶ್ವಾಸ ಗೊತ್ತುವಳಿ ಮಂಡಿಸಿ 2023ರ ಜೂನ್ನಲ್ಲಿ ಪದಚ್ಯುತಗೊಳಿಸಲಾಗಿತ್ತು. ಬಂಡಾಯ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿದ್ದರು. ಅದೇ ವರ್ಷ ಜುಲೈಯಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ ಕೆಂಚಪ್ಪ ಗೌಡ ಬಣದ ಡಿ. ಹನುಮಂತಯ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಒಂದು ವರ್ಷದ ಬಳಿಕ ಗುರುವಾರ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸಿ.ಎನ್. ಬಾಲಕೃಷ್ಣ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


