ಬೆಂಗಳೂರು: ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ಗಳ ಬಳಿ ಅನುಮೋದಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. ಗರಿಷ್ಠ 50/80 ವಿಸ್ತೀರ್ಣದವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ.
ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , “ ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ” ಎಂದರು.
“ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ” ಎಂದು ಹೇಳಿದರು.
ದರ್ಶನ್ ಅಂಡ್ ಗ್ಯಾಂಗ್ಗೆ ಶಾಕಿಂಗ್ ನ್ಯೂಸ್: ಚಾರ್ಜ್ ಶೀಟ್ ಸಲ್ಲಿಕೆಗೆ ಫಿಕ್ಸ್ ಆಯ್ತು ಮುಹೂರ್ತ..!


