ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪಂಚ ರಾಜ್ಯಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದರು.
2. ತಮಿಳುನಾಡು: ಮತದಾನ ದಿನಾಂಕ – ಏಪ್ರಿಲ್ 23, ಎಣಿಕೆ ದಿನಾಂಕ – ಮೇ 4
1. ಅಸ್ಸಾಂ: ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4
3. ಪಶ್ಚಿಮ ಬಂಗಾಳ: ಮತದಾನ ದಿನಾಂಕ- ಏಪ್ರಿಲ್ 23 (1 ನೇ ಹಂತ), ಏಪ್ರಿಲ್ 29 (2 ನೇ ಹಂತ), ಎಣಿಕೆ ದಿನಾಂಕ – ಮೇ 4
4. ಕೇರಳ : ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4.
5. ಪುದುಚೇರಿ: ಮತದಾನ ದಿನಾಂಕ – ಏಪ್ರಿಲ್ 9, ಎಣಿಕೆ ದಿನಾಂಕ – ಮೇ 4
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಆಯೋಗವು ಈ ರಾಜ್ಯಗಳಿಗೆ ಭೇಟಿ ನೀಡಿತು. ಈ ವೇಳೆ ಆಯೋಗವು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿ ಅವರ ಸಲಹೆಗಳನ್ನು ಸ್ವೀಕರಿಸಿತು. ಜಿಲ್ಲಾ ಚುನಾವಣಾ ಅಧಿಕಾರಿಗಳು, ಎಸ್ಪಿಗಳು, ಐಜಿಗಳು, ಡಿಐಜಿಗಳು ಮತ್ತು ಎಲ್ಲಾ ಜಾರಿ ಸಂಸ್ಥೆಗಳ ನೋಡಲ್ ಅಧಿಕಾರಿಗಳನ್ನು ಸಹ ಭೇಟಿ ಮಾಡಿತು. ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿಪಿಗಳೊಂದಿಗೆ ಸಭೆಗಳನ್ನು ನಡೆಸಿತು ಎಂದು ತಿಳಿಸಿದರು.
ನಿಮಗೆಲ್ಲರಿಗೂ ತಿಳಿದಿರುವಂತೆ, ಈ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾರತದ ವಿಶಿಷ್ಟ ಭೌಗೋಳಿಕ ಮತ್ತು ಸಾಂಸ್ಕೃತಿಕ ಭೂದೃಶ್ಯಗಳನ್ನು ಪ್ರತಿನಿಧಿಸುತ್ತವೆ. ಈ ಚುನಾವಣೆಗಳು ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಪ್ರತಿಬಿಂಬಿಸುತ್ತದೆ. ಅಲ್ಲದೆ, ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಹ ಪ್ರತಿನಿಧಿಸುತ್ತವೆ. ಅಷ್ಟೇ ಏಕೆ, ನಮ್ಮ ರಾಷ್ಟ್ರದ ಏಕತೆ ಮತ್ತು ವೈವಿಧ್ಯತೆಯನ್ನು ಈ ಚುನಾವಣೆಗಳು ನಿಜವಾಗಿಯೂ ಪ್ರತಿಬಿಂಬಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದರು.
17.4 ಕೋಟಿ ಮತದಾರರು
ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 17.4 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ಅಲ್ಲದೆ, ಐದು ರಾಜ್ಯಗಳ 824 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಸಲಾಗುವುದು. ಮುಂಬರುವ ಚುನಾವಣೆಗಳು ದೊಡ್ಡ ಪ್ರಮಾಣದ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಒಳಗೊಂಡಿರುತ್ತವೆ. ಹೀಗಾಗಿ, ಸುಗಮ ಮತ್ತು ನ್ಯಾಯಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ವಿವರವಾದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.


