Greater Bengaluru News9: ಸಿಲಿಕಾನ್ ಸಿಟಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಎಸೆದರೆ ದಂಡ ಮಾತ್ರವಲ್ಲ, ಪೊಲೀಸ್ ಪ್ರಕರಣವೂ ದಾಖಲಾಗಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಕಸದ ಬ್ಲಾಕ್ ಸ್ಪಾಟ್ಗಳನ್ನು ಶಾಶ್ವತವಾಗಿ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸ್ವಚ್ಛಗೊಳಿಸಿ ಸೌಂದರ್ಯೀಕರಣ ಮಾಡಿರುವ ಸ್ಥಳಗಳಲ್ಲಿ ಮತ್ತೆ ಕಸ ಎಸೆಯುವವರ ವಿರುದ್ಧ ನೇರವಾಗಿ ಎಫ್ಐಆರ್ ದಾಖಲಿಸುವ ಕ್ರಮ ಕೈಗೊಳ್ಳಲಾಗುತ್ತಿದೆ.
ಈಗಾಗಲೇ ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಉತ್ತರ ವಲಯದ ಸರ್ವಜ್ಞನಗರ ವಾರ್ಡ್–26ರಲ್ಲಿ ಸ್ವಚ್ಛತಾ ಕಾರ್ಯಾಚರಣೆ ನಡೆಸಿ, ಕಸದ ರಾಶಿಯನ್ನು ತೆರವುಗೊಳಿಸಿ ಸ್ಥಳವನ್ನು ಸೌಂದರ್ಯೀಕರಣ ಮಾಡಲಾಗಿತ್ತು. ಬಳಿಕ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಮಾರ್ಷಲ್ಗಳು ನಾಲ್ವರು ಅದೇ ಸ್ಥಳದಲ್ಲಿ ಕಸ ಎಸೆಯುತ್ತಿರುವುದನ್ನು ಪತ್ತೆಹಚ್ಚಿದ್ದಾರೆ.
ನಿಯಮ ಉಲ್ಲಂಘಿಸಿದವರಿಗೆ ದಂಡ ಪಾವತಿಸುವಂತೆ ಸೂಚಿಸಿದರೂ ಅವರು ನಿರಾಕರಿಸಿದ್ದರಿಂದ, ನಾಲ್ವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕಸದ ಬ್ಲಾಕ್ ಸ್ಪಾಟ್ಗಳನ್ನು ಮರುಸೃಷ್ಟಿಸುವವರ ವಿರುದ್ಧ ಇಂತಹ ಕಠಿಣ ಕ್ರಮವನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯದೆ ನಿಗದಿತ ಸ್ಥಳಗಳಲ್ಲೇ ತ್ಯಾಜ್ಯ ವಿಲೇವಾರಿ ಮಾಡುವಂತೆ ಮನವಿ ಮಾಡಲಾಗಿದೆ.


