ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆ ಹಾಗೂ ಸಂಜೆ ಸಹ ಧಾರಾಕಾರ ಮಳೆಯಾಗಿದೆ. ಬುಧವಾರವೂ ಮಳೆ ಮುಂದುವರಿದಿದ್ದು, ಜನ ಪರದಾಡುತ್ತಿದ್ದಾರೆ. ಜನರಿಗೆ ಸಮಸ್ಯೆ ತಪ್ಪಿಸಬೇಕು ಎನ್ನುವುದು ಸೇರಿದಂತೆ ಬಿಬಿಎಂಪಿಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು ಮಳೆ ಬಿಟ್ಟು ಬಿಡದೆ ಬರುತ್ತಿದೆ. ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ಕಂಪನಿಗಳು ಕೆಲಸಗಾರರಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ ಇನ್ನೂ ಎರಡರಿಂದ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳ ಉಪಮಹಾಸಾಗರ ವ್ಯಾಪ್ತಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಬೆಂಗಳೂರಿನ ವಿವಿಧ ಭಾಗದಲ್ಲಿ ಮಂಗಳವಾರ ಸುರಿದ ಮಳೆಯಿಂದ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಮಾನ್ಯತಾ ಟೆಕ್ ಪಾರ್ಕ್, ಸರ್ಜಾಪುರ ಹಾಗೂ ಮಹದೇವಪುರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಿಂದ ಭಾರೀ ಅನಾಹುತವೇ ಆಗಿದೆ. ಮಾನ್ಯತಾ ಟೆಕ್ ಪಾರ್ಕ್ನ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತೆ ಸೃಷ್ಟಿಯಾಗಿತ್ತು.
ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ: ಬೆಂಗಳೂರಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿಯ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಅವರು ಮಂಗಳವಾರ ರಾತ್ರಿ ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾರೆ.
ಮಳೆಯಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ, ಬಿಬಿಎಂಪಿಯಿಂದ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು, ಪಾಲಿಕೆಯ ಎಂಟು ವಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಾಲಿಕೆಯ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಬಿಬಿಎಂಪಿ ಸಿಬ್ಬಂದಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು ಮಳೆ ಮುಂಜಾಗ್ರತೆ ವಹಿಸುವಂತೆ ಹಾಗೂ ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಸಮರ್ಪಕವಾಗಿ ನಿರ್ವಹಿಸಿ ಎಂದಿದ್ದಾರೆ. ಮಳೆಯಿಂದ ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು. ಸ್ಚಚ್ಛತಾ ಡ್ರೈವ್ ನಡೆಸುವುದು ಹಾಗೂ ಸಾರ್ವಜನಿಕರ ದೂರುಗಳಿಗೆ ಶೀಘ್ರ ಸ್ಪಂದಿಸಿ ಎನ್ನುವುದು ಸೇರಿದಂತೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ಮೂರು ದಿನ ಎಚ್ಚರಿಕೆ ವಹಿಸಿ: ಬೆಂಗಳೂರು ನಗರದಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಡಿ.ಕೆ ಶಿವಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ಈ ಮೂರು ದಿನಗಳ ಕಾಲ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳುವಂತೆ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಿಯಂತ್ರಣ ಕೊಠಡಿಗೆ ಮಂಗಳವಾರ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಸಾರ್ವಜನಿಕರ ಕರೆ ಸ್ವೀಕರಿಸಿ ಮಾತನಾಡಿದ್ದಾರೆ.


