BBMP
Loading ...

Siddaramaiah

Greater Bengaluru News9 : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವದಂತಿಗಳು ಸಿಕ್ಕಾಪಟ್ಟೆ ರೆಕ್ಕೆಪುಕ್ಕ ಪಡೆದುಕೊಂಡಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಭರ್ಜರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಸಿಎಂ ಹಮ್ಮಿಕೊಂಡಿದ್ದ ಹೈ-ವೋಲ್ಟೇಜ್ ಉಪಾಹಾರ ಕೂಟಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಲ್ಲರ ಸಮ್ಮುಖದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬಳಿಕ ಇಬ್ಬರು ನಾಯಕರು ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ, ಅಧಿಕಾರ ಹಸ್ತಾಂತರದ ಚರ್ಚೆಗಳ ನಡುವೆಯೂ ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಈ ಅಪರೂಪದ ಭಾವುಕ ಕ್ಷಣದ ಫೋಟೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಅರ್ಧ ಗಂಟೆಯ ಸೀಕ್ರೆಟ್ ಸಭೆ ಮತ್ತು ಸಚಿವರ ದಂಡು
ಈ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭವಾಗುವ ಮುನ್ನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸುಮಾರು ಅರ್ಧ ಗಂಟೆಗಳ ಕಾಲ ಪ್ರತ್ಯೇಕವಾಗಿ ಮುಚ್ಚಿದ ಕೋಣೆಯಲ್ಲಿ ರಹಸ್ಯ ಸಭೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೈಕಮಾಂಡ್ ಸೂಚನೆಯಂತೆ ಮೂಡಿಬಂದಿರುವ ಅಧಿಕಾರ ಹಸ್ತಾಂತರದ ಸೂತ್ರಗಳ ಬಗ್ಗೆಯೇ ಇಬ್ಬರೂ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹೈ-ಪ್ರೊಫೈಲ್ ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳಲು ಸಚಿವರಾದ ಎಂ.ಬಿ. ಪಾಟೀಲ್, ಸಂತೋಷ್ ಲಾಡ್, ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಪ್ರಮುಖ ಶಾಸಕರು ಹಾಗೂ ಸಚಿವರ ದೊಡ್ಡ ದಂಡೇ ಕಾವೇರಿ ನಿವಾಸಕ್ಕೆ ಲಗ್ಗೆ ಇಟ್ಟಿದೆ.

ರಾಜ್ಯಪಾಲರ ದಿಢೀರ್ ಪ್ರವಾಸ: ಸಿಎಂ ರಾಜೀನಾಮೆ ಪ್ರಕ್ರಿಯೆ ವಿಳಂಬ?
ಅಧಿಕಾರಾವಧಿಯ ಅರ್ಧ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿದ್ದವು. ಆದರೆ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ದಿಢೀರ್ ಹೊರಟೂರಿಗೆ ಪ್ರವಾಸ ಕೈಗೊಂಡಿರುವುದರಿಂದ ಈ ಪ್ರಕ್ರಿಯೆಗೆ ಸದ್ಯ ಬ್ರೇಕ್ ಬಿದ್ದಂತಾಗಿದೆ. ನಿಯಮಗಳ ಪ್ರಕಾರ ಸಿಎಂ ಖುದ್ದಾಗಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಬೇಕಿರುವುದರಿಂದ, ರಾಜ್ಯಪಾಲರು ಇಂದು ಸಂಜೆ ಬೆಂಗಳೂರಿಗೆ ಮರಳಿದ ಮೇಲಷ್ಟೇ ಮುಂದಿನ ನಿರ್ಧಾರ ಹೊರಬೀಳಲಿದೆ. ಅಲ್ಲಿಯವರೆಗೆ ಸಿಎಂ ಬದಲಾವಣೆಯ ಈ ಸಸ್ಪೆನ್ಸ್ ಮತ್ತಷ್ಟು ರೋಚಕ ಹಂತ ತಲುಪಿದೆ.

Leave a Reply

Your email address will not be published. Required fields are marked *