BBMP
Loading ...

Indira Canteen

ಬೆಂಗಳೂರು : ನಗರದಲ್ಲಿ ಹೊಸದಾಗಿ 51 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಸರ್ಕಾರ ಅನುಮತಿಸಿದ್ದು, ಕ್ಯಾಂಟೀನ್‌ಗಳಿಲ್ಲದ ವಾರ್ಡ್‌ಗಳಲ್ಲಿ ಅಗತ್ಯವಿರುವ ಜಾಗ ಗುರುತಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ 225 ವಾರ್ಡ್‌ಗಳಲ್ಲಿ ಇನ್ನೂ 40ಕ್ಕೂ ಹೆಚ್ಚಿನ ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳು ನಿರ್ಮಾಣವಾಗಬೇಕಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಕ್ಯಾಂಟೀನ್‌ಗಳ ನಿರ್ಮಾಣ ಸೇರಿದಂತೆ ಒಟ್ಟು 51 ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಅನುಮತಿಸಿದೆ.

ಅದರಂತೆ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್‌ ನಿರ್ಮಿಸಲಾಗಿದ್ದು, ಉಳಿದಂತೆ ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳನ್ನು ನಿರ್ಮಿಸಬೇಕಿದೆ. ಅದಕ್ಕಾಗಿ ಯಾವೆಲ್ಲ ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳಿಲ್ಲ ಎಂಬುದನ್ನು ಗುರುತಿಸಿ ಅಲ್ಲಿ ಕ್ಯಾಂಟೀನ್‌ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸದ್ಯ 21 ವಾರ್ಡ್‌ಗಳಲ್ಲಿ ಜಾಗ ಗುರುತಿಸಲಾಗಿದೆ. ಅವುಗಳಲ್ಲಿ ಕ್ಯಾಂಟೀನ್‌ ನಿರ್ಮಾಣ ಸಾಧ್ಯತೆ ಕುರಿತಂತೆ ಪರಿಶೀಲಿಸಲಾಗುತ್ತಿದೆ. ಉಳಿದ ವಾರ್ಡ್‌ಗಳಲ್ಲೂ ಜಾಗ ಗುರುತಿಸುವಂತೆ ಹೇಳಲಾಗಿದೆ. ಒಮ್ಮೆ ಜಾಗ ಗುರುತಿಸಿದ ನಂತರ ಕ್ಯಾಂಟೀನ್‌ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುವುದು. ಅದರಂತೆ ಈಗಾಗಲೇ ಜಾಗ ಗುರುತಿಸಿರುವಲ್ಲಿ ಕ್ಯಾಂಟೀನ್‌ ನಿರ್ಮಾಣಕ್ಕೆ ಮುಂದಿನ ತಿಂಗಳು ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಭರದಿಂದ ಸಾಗುತ್ತಿದೆ ರಸ್ತೆ ಗುಂಡಿ ಮುಚ್ಚುವ ಕಾರ್ಯ: ರಸ್ತೆ ಗುಂಡಿ ಮುಚ್ಚುವುದಕ್ಕೆ ಇನ್ನೇದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ನಗರದ ವಿವಿಧ ಭಾಗದಲ್ಲಿ ಮಂಗಳವಾರವೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಿರುಸಿನಿಂದ ನಡೆಯಿತು. ಬಿಬಿಎಂಪಿಯ ಮುಖ್ಯ ಆಯುಕ್ತರು ನಗರದ ವಿವಿಧ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೂರ್ವ ವಲಯದ ಶಾಂತಲಾನಗರದ ವಾರ್ ಮೆಮೋರಿಯಲ್ ಜಂಕ್ಷನ್ (ಡೆಕತ್ಲಾನ್ ಹತ್ತಿರ) ಬಳಿ ರಸ್ತೆ ಮೇಲ್ಮೈ ಹಾಳಾಗಿರುವುದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಲಿದೆ. ಕೂಡಲೇ ರಸ್ತೆ ಮಿಲ್ಲಿಂಗ್ ಮಾಡಿ ರಸ್ತೆ ಮೇಲ್ಮೈ ಸರಿಪಡಿಸಿಲು ಸೂಚಿಸಿದರು.

ವಿಕ್ಟೋರಿಯಾ ಲೇಔಟ್‌ನ ಪಿ.ಕೆ.ಕ್ವಾಟ್ರಸ್ ರಸ್ತೆ, ಪಾಮ್ ಗ್ರೋವ್ ರಸ್ತೆ, ಮದರ್ ಥೆರೆಸಾ ರಸ್ತೆ, ವಸಂತನಗರ 6ನೇ ಮುಖ್ಯ ರಸ್ತೆ ಸೇರಿದಂತೆ ಮೊದಲಾದ ಕಡೆ ಪರಿಶೀಲಿಸಿದರು. ಈ ವೇಳೆ ರಸ್ತೆ ಕಾಲಮಿತಿಯಲ್ಲಿ ಗುಂಡಿ ಮುಚ್ಚಬೇಕು. ಇಲ್ಲವಾದಲ್ಲಿ ಸಂಬಂಧ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದೆಂದು ತುಷಾರ್‌ ಗಿರಿನಾಥ್‌ ಎಚ್ಚರಿಕೆ ನೀಡಿದರು. ಈ ವೇಳೆ ಪೂರ್ವ ವಲಯ ಮುಖ್ಯ ಎಂಜಿನಿಯರ್‌ ಸುಗುಣಾ ಇದ್ದರು.

ಸೊಸೆಗೆ ಅನುಕಂಪದ ಉದ್ಯೋಗದ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

Leave a Reply

Your email address will not be published. Required fields are marked *