ಬೆಂಗಳೂರು: ವಿದ್ಯುತ್ ಬಿಲ್ ಸೇರಿದಂತೆ ವಿವಿಧ ಶುಲ್ಕಗಳ ಪಾವತಿಗೆ ಯುಪಿಐ ವ್ಯವಸ್ಥೆ ಜಾರಿ ಮಾಡದಿರುವ ಕುರಿತು ಆಗಸ್ಟ್ 23ರ ವೇಳೆಗೆ ಸೂಕ್ತ ಪ್ರಮಾಣ ಪತ್ರ ಸಲ್ಲಿಸದೇ ಇದ್ದಲ್ಲಿ ಮುಂದಿನ ವಿಚಾರಣೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಿರಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ವಿದ್ಯುತ್ ಸರಬರಾಜು ಕೋರಿ ಹೊಸಕೋಟೆ ನಿವಾಸಿ ಸೀತಾಲಕ್ಷ್ಮೀ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿ, ಪ್ರೀಪೇಯ್ಡ್ ಮೀಟರ್ ನೀಡಲು ನಿರಾಕರಿಸಿ ಬೆಸ್ಕಾಂ ಹೊಸಕೋಟೆ ವೃತ್ತದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ 2024ರ ಮೇ 8ರಂದು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿದಾರೆ ಸೀತಾಲಕ್ಷ್ಮೀ ಆದೇಶ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಎನ್.ಎಸ್.ಸಂಜಯ ಗೌಡ ಅವರಿದ್ಧ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ಬೆಸ್ಕಾಂ ಪರ ವಕೀಲರು, ಯುಪಿಐ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇದು ಕೊನೇಯ ಅವಕಾಶ. ಆಗಸ್ಟ್ 23ರ ವೇಳೆಗೆ ಪ್ರಮಾಣ ಪತ್ರ ಸಲ್ಲಿಸದೇ ಇದ್ದಲ್ಲಿ ವ್ಯವಸ್ಥಾಪಕರು ಕೋರ್ಟ್ನಲ್ಲಿ ಹಾಜರಿದ್ದು ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಕಳೆದ ವಿಚಾರಣೆಯಲ್ಲಿ, ಇಡೀ ಜಗತ್ತು ಡಿಜಿಟಲೀಕರಣ ಆಗಿರುವಾಗ ನೀವು ಮಾತ್ರ ಆನ್ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿತ್ತು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


