Greater Bengaluru News9 : ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ, ತಾಲೂಕು, ಜಿಲ್ಲಾ ಪಂಚಾಯಿತಿ, ಗ್ರೇಟರ್ ಬೆಂಗಳೂರು ಎಲೆಕ್ಷನ್ ಮಾಡುವುದಕ್ಕೂ ಈ ಸರ್ಕಾರಕ್ಕೆ ಹಣವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸೊರವನಹಳ್ಳಿ ಮತ್ತು ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಗ್ರಾಮಗಳಲ್ಲಿ ನೂತನ ದೇವಾಲಯಗಳ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸಚಿವರು ಮಾತನಾಡಿದರು.
ಚುನಾವಣೆ ತಡ ಆಗುತ್ತಿರುವುದಕ್ಕೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅಚ್ಚರಿಯ ಕಾರಣ ಕೊಟ್ಟಿದ್ದಾರೆ. ಮಾತ್ರವಲ್ಲದೇ, ಸರ್ಕಾರ ಚುನಾವಣಾ ಆಯೋಗಕ್ಕೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ, ಸದ್ಯಕ್ಕೆ ಚುನಾವಣೆ ನಡೆಯಲ್ಲ ಎಂದಿದ್ದಾರೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿರುವುದು ಹಾಗೂ ಹಣಕಾಸಿನ ಕೊರತೆ ಇದಕ್ಕೆ ಕಾರಣವಾಗಿದ್ದು, ಆಯೋಗವು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಅಲ್ಲಿಗೆ ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಭರ ಸ್ಥಿತಿಯಲ್ಲಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಉಚಿತ ಗ್ಯಾರಂಟಿಗಳನ್ನು ನೀಡಿದೆ ಸರಿ, ಆದರೆ ಈ ಗ್ಯಾರಂಟಿಗಳಿಂದ ಖಜಾನೆಯನ್ನು ಖಾಲಿ ಮಾಡಿದೆ. ಈಗಾಗಲೇ ರಾಜ್ಯದ ಒಟ್ಟು 7,26,000 ಲಕ್ಷ ಕೋಟಿ ಮೀರಿದೆ. ಪ್ರತಿ ಕನ್ನಡಿಗನ ಮೇಲೆಯೂ ತಲಾ ಒಂದು ಲಕ್ಷ ರೂಪಾಯಿ ಸಾಲವಿದೆ. ಈ ಸಾಲವನ್ನು ತೀರಿಸುವುದು ಹೇಗೆ? ಇಂತಹ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸಾಧ್ಯ ಆಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.


