BBMP
Loading ...

New Project (5)

Greater Bengaluru news9: ಕೊಲೆ ಪ್ರಕರಣವೊಂದರ ತನಿಖೆಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪ ಎಸಗಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ:
ಸುಮಾರು ನಾಲ್ಕು ತಿಂಗಳ ಹಿಂದೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿತ್ತು. ಈ ವೇಳೆ ಇನ್ಸ್‌ಪೆಕ್ಟರ್ ರವಿಕುಮಾರ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ, ಎಫ್‌ಐಆರ್ (FIR) ದಾಖಲಿಸಲು ವಿಳಂಬ ಮಾಡಿದ್ದರು ಎನ್ನಲಾಗಿದೆ. ಘಟನೆ ನಡೆದ ಆರಂಭದಲ್ಲಿ ಇದು ನಮ್ಮ ಠಾಣಾ ವ್ಯಾಪ್ತಿಗೆ ಬರುವುದಿಲ್ಲ, ಬದಲಿಗೆ ತಾವರೆಕೆರೆ ಪೊಲೀಸ್ ಠಾಣೆಯ ಸರಹದ್ದಿಗೆ ಸೇರುತ್ತದೆ ಎಂದು ಹೇಳಿ ಜವಾಬ್ದಾರಿಯಿಂದ ನುಣುಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಠಾಣೆಗಳ ನಡುವೆ ಫುಟ್‌ಬಾಲ್ ಆದ ಕೇಸ್:
ಇನ್ಸ್‌ಪೆಕ್ಟರ್ ರವಿಕುಮಾರ್ ಅವರ ಸೂಚನೆಯಂತೆ ಪ್ರಕರಣವನ್ನು ತಾವರೆಕೆರೆ ಠಾಣೆಗೆ ವರ್ಗಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ತಾವರೆಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಇದು ಜ್ಞಾನಭಾರತಿ ಠಾಣೆ ವ್ಯಾಪ್ತಿಗೇ ಸೇರುತ್ತದೆ ಎಂದು ಸ್ಪಷ್ಟಪಡಿಸಿ ಪ್ರಕರಣವನ್ನು ಮರಳಿ ಟ್ರಾನ್ಸ್‌ಫರ್ ಮಾಡಿದ್ದರು. ಹೀಗೆ ಠಾಣೆಗಳ ನಡುವೆ ಹಗ್ಗಜಗ್ಗಾಟ ನಡೆದ ಪರಿಣಾಮ ತನಿಖೆ ವಿಳಂಬವಾಗಿತ್ತು.


ಪ್ರಕರಣವು ಮರಳಿ ಜ್ಞಾನಭಾರತಿ ಠಾಣೆಗೆ ಬಂದ ನಂತರವೂ ಇನ್ಸ್‌ಪೆಕ್ಟರ್ ರವಿಕುಮಾರ್ ಅವರು ತನಿಖೆಯಲ್ಲಿ ಆಸಕ್ತಿ ತೋರಲಿಲ್ಲ ಎನ್ನಲಾಗಿದೆ. ಕೊಲೆಯಂತಹ ಗಂಭೀರ ಅಪರಾಧ ನಡೆದಿದ್ದರೂ ಆರೋಪಿಗಳ ಪತ್ತೆ ಅಥವಾ ಸಾಕ್ಷ್ಯ ಸಂಗ್ರಹದಲ್ಲಿ ವಿಫಲರಾದ ಇನ್ಸ್‌ಪೆಕ್ಟರ್ ನಡವಳಿಕೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿತ್ತು. ಪ್ರಾಥಮಿಕ ವಿಚಾರಣೆಯಲ್ಲಿ ಕರ್ತವ್ಯಲೋಪ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆಯುಕ್ತರು ಅಮಾನತು ಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮತ್ತು ಕರ್ತವ್ಯ ನಿಷ್ಠೆ ಮುಖ್ಯ. ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳಿಗೆ ಈ ಅಮಾನತು ಆದೇಶವು ಎಚ್ಚರಿಕೆಯ ಗಂಟೆಯಾಗಿದೆ.

Leave a Reply

Your email address will not be published. Required fields are marked *