Greater Bengaluru News9 : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿದರು.
ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಐದು ಗ್ರೇಟರ್ ಬೆಂಗಳೂರು ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಬಿಎ ಚುನಾವಣೆಯ ದಿನಾಂಕವನ್ನು ಯಾವುದೇ ಕ್ಷಣದಲ್ಲಿ ಘೋಷಿಸಬಹುದು. ಆದ್ದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸಿ ಸಂಪೂರ್ಣ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು.
ಇದೇ ವೇಳೆ ರಾಜ್ಯ ಸರ್ಕಾರ ಜಿಬಿಎ ಚುನಾವಣೆಯನ್ನು ಹಲವು ಬಾರಿ ಮುಂದೂಡಿದೆ ಎಂದು ಆರೋಪಿಸಿದ ಕುಮಾರಸ್ವಾಮಿ ಅವರು, ಚುನಾವಣೆಯ ವೇಳಾಪಟ್ಟಿ ಯಾವಾಗ ಬೇಕಾದರೂ ಪ್ರಕಟವಾಗಬಹುದು. ಪ್ರತಿಯೊಬ್ಬರೂ ಸಂಪೂರ್ಣ ಸಿದ್ಧರಾಗಿರಬೇಕು” ಎಂದು ಹೇಳಿದರು.
ಬಳಿಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರದ ದುರಾಡಳಿತದಿಂದ ಕಾಂಗ್ರೆಸ್ ವಿರುದ್ಧ ಜನರಲ್ಲಿ ಆಡಳಿತ ವಿರೋಧಿ ಅಲೆ ಆರಂಭವಾಗಿದೆ. ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡು ಬೆಂಗಳೂರನ್ನು ಸರ್ಕಾರ “ಎಟಿಎಂ” ಆಗಿ ಪರಿವರ್ತಿಸಿದೆ.
ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಸರ್ಕಾರಿ ಯೋಜನೆಗಳ ಹೆಸರಿನಲ್ಲಿ ಕಮಿಷನ್ ವಸೂಲಿ ನಡೆಯುತ್ತಿದೆ. ತೆರವುಗೊಳ್ಳದ ಕಸ ಹಾಗೂ ಹದಗೆಟ್ಟ ರಸ್ತೆಗಳ ಕಾರಣ ಜನಜೀವನ ದುಸ್ತರವಾಗಿದೆ ಎಂದು ಆರೋಪಿಸಿದರು. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಆಸ್ತಿ ತೆರಿಗೆ ಸೇರಿದಂತೆ ವಿವಿಧ ಶುಲ್ಕಗಳನ್ನು ಸರ್ಕಾರ ಹೆಚ್ಚಿಸಿದೆ. ಈ ವಿಷಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದರು.
ಮನೆ ಮನೆಗೆ ಪಕ್ಷದ ವಿಚಾರಧಾರೆ ತಲುಪಿಸಿ
ಪಕ್ಷದ ಟಿಕೆಟ್ ಪಡೆಯುವುದಷ್ಟೇ ಸಾಕಾಗುವುದಿಲ್ಲ. ತಮ್ಮ ವಾರ್ಡ್ಗಳಲ್ಲಿ ಪಕ್ಷದ ಸಂಘಟನಾ ಬಲವನ್ನು ಪರಿಶೀಲಿಸಿ, ಜೆಡಿಎಸ್ನ ವಿಚಾರಧಾರೆ, ಕಾರ್ಯಕ್ರಮಗಳು ಹಾಗೂ ಭವಿಷ್ಯದ ಯೋಜನೆಗಳನ್ನು ಪ್ರತಿಯೊಂದು ಮನೆಗೂ ತಲುಪಿಸಬೇಕು ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಸಲಹೆ ನೀಡಿದರು.
ಮಹಿಳೆಯರಿಗೆ ಹೆಚ್ಚಿನ ಅವಕಾಶ
ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಡಳಿತದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಒತ್ತು ನೀಡಿದ್ದಾರೆ. ಅದೇ ರೀತಿಯಲ್ಲಿ ಜಿಬಿಎ ಚುನಾವಣೆಯಲ್ಲೂ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವುದು ಪಕ್ಷದ ಆದ್ಯತೆಯಾಗಿರಲಿದೆ ಎಂದು ತಿಳಿಸಿದರು.
ಬಿಜೆಪಿ ಜೊತೆ ಸಮನ್ವಯಕ್ಕೆ ಸೂಚನೆ
ಬಳಿಕ ಕಾಂಗ್ರೆಸ್ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಬಿಜೆಪಿ ಮುಖಂಡರೊಂದಿಗೆ ಸಮನ್ವಯ ಸಾಧಿಸುವಂತೆ ಜೆಡಿಎಸ್ ಕಾರ್ಯಕರ್ತರಿಗೆ ಸೂಚಿಸಿದರು. ಜೊತೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಅನರ್ಹ ಅಥವಾ ಅಕ್ರಮ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವಂತೆ ಟಿಕೆಟ್ ಆಕಾಂಕ್ಷಿಗಳಿಗೆ ಸೂಚನೆ ನೀಡಿದರು.


