Greater Bengaluru News9: ರಾಜಧಾನಿಯ ಕೆಂಗೇರಿ ಭಾಗದಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದ್ದು, ಹೊಸ ವಿದ್ಯುತ್ ಸಂಪರ್ಕ ನೀಡಲು 10 ಸಾವಿರ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಕಿರಿಯ ಅಭಿಯಂತರರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕೆಂಗೇರಿ ಉಪ ವಿಭಾಗದ (K1) ಕೆಂಗೇರಿ ಕೋಟೆ ಶಾಖೆಯಲ್ಲಿ ಕಿರಿಯ ಅಭಿಯಂತರರಾಗಿ (JE) ಕಾರ್ಯನಿರ್ವಹಿಸುತ್ತಿದ್ದ ಮಧುಸೂದನ್ ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಆಶ್ವಾಸ ವಿದ್ಯುತ್ ಗುತ್ತಿಗೆದಾರ ಮಹೇಶ್ ಕೆ ಎಸ್ ಸೂರ್ಯ ಪವರ್ ಸರ್ವಿಸ್ ರವರ ದೂರಿನ ಮೇರೆಗೆ ಮೂರು ಅಂತಸ್ತಿನ ಮನೆಯ ಹೊಸ ವಿದ್ಯುತ್ ಸಂಪರ್ಕಕ್ಕೆ ಹತ್ತು ಸಾವಿರ ರೂಪಾಯಿಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದು 7,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ.
ಮನೆಯೊಂದಕ್ಕೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಮತ್ತು ಮೀಟರ್ ಅಳವಡಿಸಲು ದೂರುದಾರರು ಅರ್ಜಿ ಸಲ್ಲಿಸಿದ್ದರು. ಈ ಕೆಲಸವನ್ನು ಮಾಡಿಕೊಡಲು ಮಧುಸೂದನ್ ಹಣಕ್ಕಾಗಿ ಒತ್ತಾಯಿಸಿದ್ದರು ಎನ್ನಲಾಗಿದೆ. ಅಧಿಕಾರಿಯ ಕಿರುಕುಳದಿಂದ ಬೇಸತ್ತ ಗುತ್ತಿಗೆದಾರ ಮಹೇಶ್ ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಇಂದು ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲೇ ಮಧುಸೂದನ್ ಮತ್ತು ಆಶ್ವಾಸ ರವರುಗಳನ್ನು ವಶಕ್ಕೆ ಪಡೆದಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಮಧುಸೂದನ್ ಅವರ ಕೈಗಳಲ್ಲಿದ್ದ ರಾಸಾಯನಿಕದ ಪರೀಕ್ಷೆ ನಡೆಸಿ ಭ್ರಷ್ಟಾಚಾರ ನಡೆದಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.
ಆರೋಪಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ಕೆಂಗೇರಿ ಕೋಟೆ ಶಾಖೆಯ ಕಚೇರಿಯಲ್ಲಿ ಪರಿಶೀಲನೆ ಮುಂದುವರಿದಿದ್ದು, ಈ ಪ್ರಕರಣದಲ್ಲಿ ಬೇರೆಯವರ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.


