Greater Bengaluru News9 : ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಸಿದ ಬಗ್ಗೆ ಸಾಲು ಸಾಲು ಆರೋಪಗಳು ಕೇಳಿಬಂದ ಹಿನ್ನೆಲೆ ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಕೆಎಸ್ಆರ್ಟಿಸಿ (ವಾಯವ್ಯ) ಚೀಫ್ ಮೆಕ್ಯಾನಿಕ್ ಆಗಿರುವ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 12 ತಂಡ ದಾಳಿ ನಡೆಸಿದೆ.
ಸಿದ್ದೇಶ್ವರ ಅವರ ದಾವಣಗೆರೆ ನಗರದ ಆಂಜನೇಯ ಬಡಾವಣೆ ಮನೆ, ಹುಬ್ಬಳ್ಳಿ ಕಚೇರಿ ಸೇರಿ 4 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿ ವೇಳೆ ಸಿದ್ದೇಶ್ವರ ಹೆಬ್ಬಾಳ್ ಮನೆಯಲ್ಲಿ 40 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.
ಈ ಬೆನ್ನಲ್ಲೇ ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರ ಮನೆ ಮೇಲೆ, ದಾವಣಗೆರೆ ನಗರದ ಸಿದ್ದವೀರಪ್ಪ. ಬಡಾವಣೆ ಮನೆ, ಚಿತ್ರದುರ್ಗ ಕಚೇರಿ ಸೇರಿ 5 ಕಡೆ ದಾಳಿಯಾಗಿದೆ. ಬೆಳಗಾವಿ ಕೆಆರ್ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಚಿತ್ರದುರ್ಗದ, ದಾವರಣೆಗೆರೆ, ಬೆಳಗಾವಿಯಲ್ಲಿರುವ ಮನೆಗಳು ಸೇರಿ 5 ಕಡೆ ದಾಳಿ ನಡೆಸಲಾಗಿದೆ.
ಇನ್ನೂ ಕಲಬುರಗಿಯಲ್ಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪಂಚಾಯತ್ ರಾಜ್ ನಿವೃತ್ತ ಇಂಜನಿಯರ್ ಸೂಪರಿಡೇಂಟ್ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ನಡೆಸಿದೆ. ನಗರದ ಗೋದುತಾಯಿ ಮನೆ ಸೇರಿ ಐದು ಕಡೆ, ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್ನ 2 ಕಾಂಪ್ಲೆಕ್ಸ್, ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ದಾಳಿಯಾಗಿದೆ.
ಚಿಕ್ಕಮಗಳೂರಿನಲ್ಲೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಸಾರಿದ್ದು, ಎಸಿಎಫ್ ಮೋಹನ್ ಮನೆ ಮೇಲೆ ತಿರುಮಲೇಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಅರಣ್ಯಾಧಿಕಾರಿ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಇದರೊಂದಿಗೆ ಕಡೂರಿನಲ್ಲಿರುವ ಶ್ರೀನಿವಾಸ್ ಸಹೋದರಿ ಮನೆ ಮೇಲೂ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಗೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.


