ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಲೆಯಿಂದ ಹೊರಗೆ ಉಳಿಯುವ ಮಕ್ಕಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವ ಆಘಾತಕಾರಿ ಅಂಶವೊಂದು ಇದೀಗ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನಂತಹ ಪ್ರಮುಖ ನಗರದಲ್ಲಿ ಸಾವಿರಾರು ಜನ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದಾರೆ ಎನ್ನುವ ಆಘಾತಕಾರಿ ಅಂಶ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದೆ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಬೇರೆ ಊರುಗಳಿಂದ ಜನ ಬೆಂಗಳೂರಿಗೆ ವಿದ್ಯಾಭ್ಯಾಸ ಮಾಡುವುದಕ್ಕೆ ಬರುತ್ತಾರೆ. ಆದರೆ, ಬೆಂಗಳೂರಿನಂತಹ ನಗರದಲ್ಲಿಯೇ ಮಕ್ಕಳು ಶಾಲೆ ಬಿಡುತ್ತಿದ್ದಾರೆ.
ನಗರದಲ್ಲಿ ಬಡತನ ಹಾಗೂ ವಿವಿಧ ಕಾರಣಗಳಿಗೆ ಸಾವಿರಾರು ಜನ ಮಕ್ಕಳು ಶಾಲೆಯನ್ನು ಬಿಡುತ್ತಿದ್ದಾರೆ. ಇದೀಗ ಈ ರೀತಿ ಶಾಲೆಯಿಂದ ಹೊರಗಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಪ್ರಯತ್ನ ನಡೆದಿದೆ. ಬೆಂಗಳೂರಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವ ಸಮೀಕ್ಷಾ ನಡೆಸಲಾಗುತ್ತಿದೆ. ಇದುವರೆಗೆ ಬೆಂಗಳೂರಿನಲ್ಲಿ 1,08,203 ಮಕ್ಕಳ ಪೈಕಿ ಶಾಲೆಯಿಂದ ಹೊರಗುಳಿದ 6,936 ಮಕ್ಕಳನ್ನು ಗುರುತಿಸಲಾಗಿದೆ ಎಂದು ಬಿಬಿಎಂಪಿಯ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.
ಬಿಬಿಎಂಪಿಯ 8 ವಲಯಗಳ ಜಂಟಿ ಆಯುಕ್ತರನ್ನು ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವ ಸಮೀಕ್ಷಾ ಕಾರ್ಯಕ್ಕೆ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ. ಅದರಂತೆ ಎಲ್ಲಾ ವಲಯಗಳಲ್ಲಿ ವಾರ್ಡ್ವಾರು ಸಿಬ್ಬಂದಿ ನಿಯೋಜಿಸಿ ಸಮೀಕ್ಷಾ ನಡೆಸಲಾಗುತ್ತಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು ಶಾಲೆಗೆ ದಾಖಲಾಗದ ಮಕ್ಕಳ ಕುರಿತು ಹೈಕೋರ್ಟ್ನಲ್ಲಿ ಕೇಸ್ ಚಾಲನೆಯಲ್ಲಿದೆ. ಈ ಸಂಬಂಧ ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವ ಕಾರ್ಯ ಪ್ರಕ್ರಿಯೆಯಲ್ಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವಿಕೆ ಸಮೀಕ್ಷೆ ಕಾರ್ಯವನ್ನು, ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆ ವತಿಯಿಂದ ‘ಕರ್ನಾಟಕ ಸರ್ಕಾರ ಆಪ್ ತಾಣ’ದಲ್ಲಿರುವ ‘ಕರ್ನಾಟಕ ಹೆಚ್2ಹೆಚ್ ಮಕ್ಕಳ ಸಮೀಕ್ಷೆ ಅಪ್ಲಿಕೇಶನ್’ (Karnataka H2H Children Survey App) ಎಂಬ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ.
ಶಾಲೆಯಿಂದ ಹೊರಗುಳಿದ ಸಾವಿರಾರು ಮಕ್ಕಳು: ಇನ್ನು ಬಿಬಿಎಂಪಿ ನಡೆಸಿದ ಸಮೀಕ್ಷೆಯಲ್ಲಿ ಸಾವಿರಾರು ಜನ ಮಕ್ಕಳು ಶಾಲೆ ಬಿಟ್ಟಿರುವುದು ಇದೀಗ ವರದಿಯಾಗಿದೆ. ಇಲ್ಲಿಯ ವರೆಗೆ ಬರೋಬ್ಬರಿ ಶಾಲೆಯಿಂದ ಹೊರಗೆ ಉಳಿದಿದ್ದ 6,936 ಮಕ್ಕಳನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 8 ವಲಯಗಳಲ್ಲಿಯೂ ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವಿಕೆ ಸಮೀಕ್ಷಾ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಪಾಲಿಕೆಯ 8 ವಲಯಗಳಲ್ಲಿ 10ನೇ ಮಾರ್ಚ್ 2025 ರವರೆಗೆ 1,08,203 ಮಕ್ಕಳ ಪೈಕಿ, ಶಾಲೆಯಿಂದ ಹೊರಗುಳಿದ 6,936 ಮಕ್ಕಳನ್ನು ಗುರುತಿಸಲಾಗಿದೆ. ಶೀಘ್ರ ಎಲ್ಲಾ ಮನೆ-ಮನೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
24ನೇ ಫೆಬ್ರಬರಿ 2025 ರಿಂದ ಸಮೀಕ್ಷೆ ಆರಂಭ: ನಗರದಲ್ಲಿ ಎಲ್ಲಾ ಮನೆಗಳನ್ನು ಕೋರ್ಟ್ ನಿರ್ದೇಶನದಂತೆ 24ನೇ ಫೆಬ್ರಬರಿ 2025ರಿಂದ ಪಾಲಿಕೆಯ ಎಂಟು ವಲಯಗಳಲ್ಲಿ ಶಿಕ್ಷಣ ವಿಭಾಗದ ಆಶಾ ಕಾರ್ಯಕರ್ತೆಯರು, ಲಿಂಕ್ ವರ್ಕರ್ಸ್ಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ವಾರ್ಡ್ನಲ್ಲಿ ಸುಮಾರು 10 ಗಣತಿದಾರರನ್ನು ನೇಮಿಸಲಾಗಿದೆ. ಈ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ 6 ರಿಂದ 18 ವರ್ಷದ ವಯಸ್ಸಿನ ಎಲ್ಲರನ್ನೂ ಸಮೀಕ್ಷೆ ನಡೆಸಿ ಆಪ್ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.
ಸಂವಿಧಾನದ ಕಲಂ21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಕಾಲ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ‘ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012’ ರನ್ವಯ ಸ್ಥಳೀಯ ಸಂಸ್ಥೆಗಳು ಶಿಕ್ಷಣ ರಿಜಿಸ್ಟರ್ ಅನ್ನು ನಿರ್ವಹಿಸಬೇಕು ಎನ್ನುವ ನಿಯಮವಿದೆ. ‘ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು(ತಿದ್ದುಪಡಿ) ನಿಯಮಗಳು, 2014’ ರನ್ವಯ ಮಕ್ಕಳ ಹಾಜರಾತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.


