ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಶಾಸಕರಾದ ಮುನಿರತ್ನ ಅವರು ಗುತ್ತಿಗೆದಾರರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆಯಲ್ಲಿ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿರುವುದನ್ನು ರಾಜ್ಯ ಒಕ್ಕಲಿಗರ ಸಂಘ ತೀವವಾಗಿ ಖಂಡಿಸಿದೆ.
ಈ ಪ್ರಕರಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳು ಯಾರೇ ಆದರೂ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣರವರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

ಮುನಿರತ್ನ ಬಂಧನ
ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಶನಿವಾರ ಕೋಲಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರ್ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಇಂದು ಸಂಜೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಮುನಿರತ್ನರನ್ನು ವಶಕ್ಕೆ ಪಡೆದಿರುವ ಕೋಲಾರ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಬೆಂಗಳೂರಿಗೆ ಕರೆತಂದ ಬಳಿಕ ಅವರನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ. ಮುನಿರತ್ನ ಅವರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್ಐಆರ್ನಲ್ಲಿ, ಶಾಸಕರು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾರೆ.
ಹೊಸದಾಗಿ 51 ಇಂದಿರಾ ಕ್ಯಾಂಟೀನ್ ನಿರ್ಮಾಣ: ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ
ಸೊಸೆಗೆ ಅನುಕಂಪದ ಉದ್ಯೋಗದ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು


