BBMP
Loading ...

KSRTC

Greater Bengaluru News9: ರಾಜ್ಯದ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದ್ದು, ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಿಸಲು ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ವಿಧಾನಸೌಧದಲ್ಲಿ ಶನಿವಾರ ತಮ್ಮ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಡೀಸೆಲ್ ಬೆಲೆ ತೀವ್ರ ಹೆಚ್ಚಾಗಿದೆ. ಡಿಪೋದ ಬೆಲೆಗೂ, ಖಾಸಗೀಯಾಗಿ ಸಿಗುವ ಡೀಸೆಲ್ ಬೆಲೆಗೂ ಅಜಗಾಂತರ ವ್ಯತ್ಯಾಸ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಸ್ ಪ್ರಯಾಣ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

ಡೀಸೆಲ್ ದರ ನೋಡಿದ್ರೆ ಗಾಬರಿಯಾಗುತ್ತೆ. ಅದರ ಬಗ್ಗೆ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ನೋಡಿಕೊಂಡು ಕೆಎಸ್ ಆರ್ ಟಿಸಿ ಉಳಿಸಬೇಕು, ಜನರಿಗೂ ಹೊರೆಯಾಗಬಾರದು. ರಾಜ್ಯದ ಹಿತಕ್ಕಾಗಿ ನಾವು ಈ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಸಾರಿಗೆ ಇಲಾಖೆಯು ಟಿಕೆಟ್ ದರ ಹೆಚ್ಚಳಕ್ಕೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ. ಡಿಪೋಗಳಲ್ಲಿ ಖರೀದಿಸುವ ಡೀಸೆಲ್ ಮತ್ತು ಖಾಸಗಿಯಾಗಿ ಲಭ್ಯವಿರುವ ಡೀಸೆಲ್ ಬೆಲೆಗಳ ನಡುವೆ ಸುಮಾರು 40 ರೂಪಾಯಿಗಳ ದೊಡ್ಡ ವ್ಯತ್ಯಾಸವಿದೆ. ಈ ಬೆಲೆ ವ್ಯತ್ಯಾಸದಿಂದಾಗಿ, ಕೆಲವು ಖಾಸಗಿ ಸಾರಿಗೆ ನಿರ್ವಾಹಕರು ಡಿಪೋದಿಂದ ಡೀಸೆಲ್ ಖರೀದಿಸುವುದನ್ನು ಬಿಟ್ಟು, ಸಾರ್ವಜನಿಕ ಪೆಟ್ರೋಲ್ ಬಂಕ್‌ಗಳಿಂದ ಡೀಸೆಲ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದರು.

ಕೆಎಸ್‌ಆರ್‌ಟಿಸಿಯನ್ನು ಉಳಿಸಿಕೊಳ್ಳುವ ಜೊತೆಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಮತೋಲಿತ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಡೀಸೆಲ್ ಬೆಲೆ ಹೆಚ್ಚಾದಾಗ ಸ್ವಯಂಚಾಲಿತವಾಗಿ ಸಾರಿಗೆ ದರ ಹೆಚ್ಚಳ ಮಾಡುವ ತೀರ್ಮಾನವಿತ್ತು. ಪ್ರಧಾನ ಮಂತ್ರಿಗಳು ಸಾರ್ವಜನಿಕ ಸಾರಿಗೆಯನ್ನು ಬಳಸಲು ಮನವಿ ಮಾಡಿರುವ ಹಿನ್ನೆಲೆಯಲ್ಲಿ, ರಾಜ್ಯ ಮತ್ತು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಬೇಗ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.

Leave a Reply

Your email address will not be published. Required fields are marked *