Greater Bengaluru News9 : ಬಿಬಿಎಂಪಿ ನಂತರ ರಚನೆ ಮಾಡಲಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ 7 ಸಾವಿರ ಕೋಟಿ ರೂ.ಗಳ ಅನುದಾನ ನೀಡುವುದರ ಜೊತೆಗೆ ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡಲು ಸಾವಿರಾರು ಕೋಟಿ ರೂ. ಖರ್ಚು ಮಾಡಲು ನಮ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪ್ರಸಕ್ತ ಸಾಲಿನ ದಾಖಲೆಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿಗಳು, ಬೆಂಗಳೂರು ಒಂದು ನಗರವಷ್ಟೇ ಅಲ್ಲ. ಇದು ಅಸಂಖ್ಯಾತ ಕನಸುಗಳ ನೆಲೆಬೀಡು. ನಾಡ ಪ್ರಭು ಕೆಂಪೇಗೌಡರ ಆಡಳಿತದಿಂದ ಹಿಡಿದು ಇಂದಿನ ಸ್ಟಾರ್ಟ್ಅಪ್ ಕ್ರಾಂತಿಯವರೆಗೆ ಈ ನಗರ ತನ್ನದೇ ಆದ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇಂತಹ ನಗರವನ್ನು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿಸಲು ನಮ ಸರ್ಕಾರ ಉದ್ದೇಶಿಸಿದೆ ಎಂದರು.
ಬೆಂಗಳೂರು ಅಭಿವೃದ್ಧಿಗೆ ಈ ಹಿಂದೆ 3000 ಕೋಟಿ ರೂ.ಗಳನ್ನು ನೀಡಲಾಗುತ್ತಿತ್ತು. ಆದರೆ, ಕಳೆದ ಬಜೆಟ್ನಲ್ಲಿ ನಮ ಸರ್ಕಾರ ಆ ಅನುದಾನವನ್ನು 7000 ಕೋಟಿ ರೂ.ಗಳಿಗೆ ಹೆಚ್ಚಿಸಿತ್ತು. ಈ ಬಾರಿಯೂ ಜಿಬಿಎ ಅಭಿವೃದ್ಧಿ ದೃಷ್ಟಿಯಿಂದ ನಾವು 7 ಸಾವಿರ ಕೋಟಿ ರೂ.ಗಳ ಅನುದಾನ ನೀಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾದಿ 1255 ಕೋಟಿ ರೂ. ವೆಚ್ಚ ಮಾಡಲಿದ್ದೇವೆ. 1700 ಕೋಟಿ ರೂ. ವೆಚ್ಚದಲ್ಲಿ ನಗರದ 158 ಕಿ.ಮೀ ಉದ್ದದ ರಸ್ತೆಯನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸುತ್ತೇವೆ. 1936 ಕೋಟಿ ರೂ. ವೆಚ್ಚದಲ್ಲಿ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳನ್ನು ಅಭಿವೃದ್ಧ ಮಾಡುವ ನಿರ್ಧಾರ ಮಾಡಿದ್ದೇವೆ ಎಂದರು.
ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೆ ಹೊರ ವರ್ತುಲ ರಸ್ತೆಯನ್ನು ಅಭಿವೃದ್ದಿ ಪಡಿಸುವ ಯೋಜನೆಗೆ 450 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ. ಅದೇ ರೀತಿ 273 ಕೋಟಿ ರೂ.ವೆಚ್ಚದಲ್ಲಿ ರಾಜಕಾಲುವೆಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಕೆರೆಗಳ ಅಭಿವೃದ್ದಿ ಕಾಮಗಾರಿ ಹಮಿಕೊಳ್ಳುತ್ತಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
ರಸ್ತೆಗಳ ಧೀರ್ಘಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ 450 ಕಿ.ಮೀಗೂ ಹೆಚ್ಚು ಉದ್ದದ ರಸ್ತೆಗಳನ್ನು 3000 ಕೋಟಿ ರೂ.ಗಳಲ್ಲಿ ವೈಟ್ ಟಾಪಿಂಗ್ ಮಾಡಲು ತೀರ್ಮಾನಿಸಿದ್ದೇವೆ. ನಗರ ಪಾಲಿಕೆಗಳ ಸ್ವಂತ ಸಂಪನೂಲಗಳಿಂದ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್ಗಳನ್ನು ಸೌಂದರ್ಯೀಕರಣಗೊಳಿಸಿ 500 ಕಿ.ಮೀ ಉದ್ದದ ಪಾದಚಾರಿ ಮಾರ್ಗಗಳನ್ನು ಮೇಲ್ದರ್ಜೆಗೇರಿಸಲು ಮತ್ತು 100 ಸ್ಕೈ ವಾಕ್ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ವಿಶ್ವಬ್ಯಾಂಕ್ ನೆರವಿನಲ್ಲಿ ಜಲ ಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ರೂಪಿಸಿ ರಾಜಕಾಲುವೆಗಳ ಅಭಿವೃದ್ಧಿಗೆ 2000 ಕೋಟಿ ರೂ.ಗಳ ಕಾಮಗಾರಿಗೆ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಪ್ಲಾನ್ ಹಾಕಿಕೊಳ್ಳಲಾಗಿದೆ.
ಹಣ ಸಂಗ್ರಹಕ್ಕೆ ಮುನ್ಸಿಪಲ್ ಬಾಂಡ್:
ಐದು ನಗರ ಪಾಲಿಕೆಗಳ ಬ್ಯಾಲೆನ್ಸ್ ಶೀಟ್ ಆಧಾರದ ಮೇಲೆ ಮುನಿಸಿಪಲ್ ಬಾಂಡ್ಗಳ ಮೂಲಕ ಸಂಪನೂಲ ಕ್ರೋಢಿಕರಣಕ್ಕೆ ಇದೇ ಮೊದಲ ಬಾರಿಗೆ ಕ್ರಮ ಕೈಗೊಳ್ಳಲಾಗಿದೆ. 2027ರ ಅಂತ್ಯದೊಳಗೆ ಬೆಂಗಳೂರಿನ ಹೊಸ ಪರಿಷ್ಕೃತ ಮಾಸ್ಟರ್ ಪ್ಲಾನ್ ಜಾರಿಗೊಳಿಸಿ, ಅದರ ಜೊತೆಗೆ ಸಮಗ್ರ ಮೊಬಿಲಿಟಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಿಎಂ ಘೋಷಿಸಿದರು.
ಮೆಟ್ರೋ ಮಾರ್ಗ ವಿಸ್ತರಣೆ;
ಪ್ರಸ್ತುತ ಇರುವ 96 ಕಿ.ಮೀಗಳ ಮೆಟ್ರೋ ಜಾಲದಿಂದ 10 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ ಸರ್ಕಾರ ಮೆಟ್ರೋ ವಿಸ್ತರಣೆ ಮಾಡಲು ತೀರ್ಮಾನಿಸಿದ್ದು ಪ್ರಸಕ್ತ ಹಣಕಾಸು ವರ್ಷದಲ್ಲಿ 41 ಕಿ.ಮೀ ಉದ್ದದ ಮೆಟ್ರೋ ಜಾಲ ವಿಸ್ತರಣೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಅವರು ಹೇಳಿದರು.
ನಮ ಈ ಮಹತ್ವದ ನಿರ್ಧಾರದಿಂದ ಪ್ರಸ್ತುತ ಸಂಚರಿಸುತ್ತಿರುವ 10 ಲಕ್ಷ ಮೆಟ್ರೋ ಪ್ರಯಾಣಿಕರ ಸಂಖ್ಯೆ 15 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು. ಹೊರ ವರ್ತುಲ ರಸ್ತೆಯ ಮೆಟ್ರೋ ವಯಾಡಕ್ಟ್ ಉದ್ದಕ್ಕೂ 9 ಕಿ.ಮೀ ಉದ್ದದ ಪಾದಚಾರಿ ನಡಿಗೆ ಮಾರ್ಗಗಳನ್ನು ಹೊರ ವರ್ತುಲ ಕಂಪನಿಗಳ ಸಂಘದ ಪ್ರಯೋಜಕತ್ವದಲ್ಲಿ 160 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿದ್ದೇವೆ ಎಂದು ಅವರು ಹೇಳಿದರು.
ಕಾವೇರಿ ಆರನೇ ಹಂತದ ಯೋಜನೆ ಜಾರಿ;
ನಗರದ ಕುಡಿಯುವ ನೀರಿನ ಬವಣೆ ತಪ್ಪಿಸುವ ಉದ್ದೇಶದಿಂದ ನಮ ಸರ್ಕಾರ ಕಾವೇರಿ ಆರನೇ ಹಂತದ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಈ ಯೋಜನೆ ಜಾರಿಗಾಗಿ ಜೀಕಾ ನೆರವಿನಿಂದ 6939 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಆರು ಟಿಎಂಸಿ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಬಿಸಿನೆಸ್ ಕಾರಿಡಾರ್;
ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗಿನ 73 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಭಾಗ-1 ನಿರ್ಮಾಣ ಮಾಡುತ್ತಿದ್ದೇವೆ. ಈ ಯೋಜನೆಗಾಗಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ಯೋಜನೆ ಪೂರ್ಣಕ್ಕೆ ಗುರಿ ಇರಿಸಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.
ಸುರಂಗಮಾರ್ಗ ರಸ್ತೆ ;
ಇದರ ಜೊತೆಗೆ ಹೆಬ್ಬಾಳ ಜಂಕ್ಷನ್ನಿಂದ ಸಿಲ್್ಕಬೋರ್ಡ್ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆ ಹಾಗೂ ಕೆ.ಆರ್ಪುರಂನಿಂದ ಮೈಸೂರು ರಸ್ತೆವರೆಗಿನ ಪೂರ್ವ-ಪಶ್ಚಿಮ ಕಾರಿಡಾರ್ ಯೊಜನೆಯಲ್ಲಿ ಒಟ್ಟು 40 ಕಿ.ಮೀ ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಿಸಲು 40 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಮೊದಲ ಹಂತದಲ್ಲಿ 17 ಕಿ.ಮೀ ಉದ್ದದ ಸುರಂಗ ರಸ್ತೆಯನ್ನು 17780 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದರು.
ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ವರೆಗಿನ ಟನಲ್ ರೋಡ್ ಹಾಗೂ ಎಲಿವೆಟೇಡ್ ರಸ್ತೆ ನಿರ್ಮಾಣಕ್ಕೆ ಬಿಡಿಎ ವತಿಯಿಂದ 2250 ಕೋಟಿ ರೂ.ಗಳನ್ನು ಬಳಕೆ ಮಾಡಲಾಗುತ್ತಿದೆ ಇದರ ಜೊತೆಗೆ ನಗರದ ದಟ್ಟಣೆ ಕಡಿಮೆ ಮಾಡಲು ನೆಲಮಂಗಲ- ತಾವರೆಕೆರೆ- ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು ಬಿಎಂಆರ್ಡಿಎ ಸಹಕಾರದಿಂದ ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.


